ಬೆಡ್ ಗಳನ್ನು ಮೀಸಲಿಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ; ಶ್ರೀರಾಮುಲು
ಬಳ್ಳಾರಿ : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿರೋ ಹಿನ್ನೆಲೆ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಸೋಂಕಿತರಿಗೆ ಅಂದಾಜು 50 ಬೆಡ್ ಗಳನ್ನ ಮೀಸಲಿಡಲು ಸೂಚನೆ ನೀಡಲಾಗಿತ್ತು. ಆದ್ರೆ ಕೆಲ ಖಾಸಗಿ ಆಸ್ಪತ್ರೆಗಳು ಸರ್ಕಾರದ ಸೂಚನೆ ಪಾಲಿಸದ ಹಿನ್ನೆಲೆ ಅವುಗಳ ವಿರುದ್ಧ ಕ್ರಮಿನಲ್ ಮೊಕದ್ದಮೆ ಹೂಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಡಂಬಡಿಕೆ ಪ್ರಕಾರ ಪ್ರತಿ ಖಾಸಗಿ ಆಸ್ಪತ್ರೆ 50 ಬೆಡ್ ಗಳನ್ನ ಕೋವಿಡ್ ಸೋಂಕಿತರಿಗೆ ಮೀಸಲಿರಿಸಬೇಕೆಂಬ ಆದೇಶವಿದೆ. ಹಲವು ಖಾಸಗಿ ಆಸ್ಪತ್ರೆಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿವೆ. ಕೆಲ ಖಾಸಗಿ ಆಸ್ಪತ್ರೆಗಳು ಮಾತ್ರ ರಾಜ್ಯ ಸರ್ಕಾರದ ಒಡಂಬಡಿಕೆಯನ್ನ ಪಾಲಿಸುತ್ತಿಲ್ಲ. ಹೀಗಾಗಿ, ಅಂತಹ ಖಾಸಗಿ ಆಸ್ಪತ್ರೆಗಳನ್ನ ಗುರುತಿಸಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ರವಾನಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಅಂದಾಜು 2 ಲಕ್ಷಕ್ಕೂ ಅಧಿಕ ಆಂಟಿಜೆನ್ ಕಿಟ್ ಗಳನ್ನ ಖರೀದಿಸಲು ಚಿಂತನೆ ನಡೆಸಿದ್ದು, ಈಗಾಗಲೇ 1 ಲಕ್ಷ ಕಿಟ್ ಗಳನ್ನು ಖರೀದಿಸಲಾಗಿದೆ ಎಂದು ತಿಳಿಸಿದ ರಾಮುಲು, ಕೋವಿಡ್ ಟೆಸ್ಟ್ ರಿಪೋರ್ಟ್ ಬರಲು ತಡವಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗೆ ಎರಡ್ಮೂರು ಟೆಸ್ಟಿಂಗ್ ಲ್ಯಾಬ್ ಗಳನ್ನ ಸ್ಥಾಪಿಸಲು ನಿರ್ಧರಿಸಿದ್ದು, ಬಹು ಬೇಗನೆ ರಿಪೋರ್ಟ್ ಬರಲು ಇದು ಸಹಕಾರಿಯಾಗಲಿದೆ ಎಂದರು.