ಮತ್ತೆ ಅಧಿಕಾರಕ್ಕೆ ಬಂದ್ರೆ ಪ್ರತಿ ಕುಟುಂಬಕ್ಕೆ 10 ಕೆಜಿ ಉಚಿತವಾಗಿ ಅಕ್ಕಿ – ಸಿದ್ದರಾಮಯ್ಯ
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಪ್ರತಿ ಸದಸ್ಯರಿಗೆ ಉಚಿತವಾಗಿ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದಲ್ಲಿ ನಿರ್ಮಿಸಲಾಗಿದ್ದ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು ‘ರೈತರ ಸಾಲ, ನೇಕಾರರ ಸಾಲ ಮನ್ನಾ ಮಾಡಿದ್ದು ಕಾಂಗ್ರೆಸ್ ಸರಕಾರ. 2019ರಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಲಕ್ಷಾಂತರ ಕುಟುಂಬಗಳು ಆಸ್ತಿಪಾಸ್ತಿ ಕಳೆದುಕೊಂಡು ಅತಂತ್ರರಾಗಿದ್ದರು. ಈ ಬಗ್ಗೆ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚಿಸಿ ಸಂಕಷ್ಟದಲ್ಲಿರುವ ನಿರಾಶ್ರಿತರ ಸಹಾಯಕ್ಕೆ ಮುಂದಾಗಿ, ಪ್ರವಾಹ ಪೀಡಿತ ಗ್ರಾಮಗಳನ್ನು ಶಾಶ್ವತವಾಗಿ ಸ್ಥಳಾಂತರಿಸಿ ಎಂದು ಸಲಹೆ ನೀಡಿದ್ದರೂ ಬಿಜೆಪಿ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ.
ದೇಶ ಭಕ್ತ ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಿಸುವ ಜತೆಗೆ ಅವರ ಶೌರ್ಯ, ಧೈರ್ಯ, ದೇಶ ಪ್ರೇಮಗಳಂತ ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕು. 565 ಸಂಸ್ಥಾನಗಳು ಒಗ್ಗೂಡಿದ್ದರೆ ಭಾರತಕ್ಕೆ ಬ್ರಿಟಿಷರು ಬರುತ್ತಿರಲಿಲ್ಲ. ತಮ್ಮಲ್ಲಿಯ ಒಳ ಜಗಳದಿಂದ ಬ್ರಿಟಿಷರು 200 ವರ್ಷಗಳ ಕಾಲ ನಮ್ಮನ್ನು ಗುಲಾಮರಂತೆ ದುಡಿಸಿಕೊಂಡಿರು. ಆ ಸಂಕೋಲೆಯಿಂದ ಬಿಡುಗಡೆ ಹೊಂದಲು ಬಲಿದಾನವೇ ಆಗಬೇಕಾಯಿತು’ ಎಂದು ಅವರು ಹೇಳಿದರು.