ಕಲ್ಯಾಣ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 18,780 ಶಿಕ್ಷಕ ಹುದ್ದೆಗಳು ಖಾಲಿ ಇದ್ದು, ಇದರಿಂದಾಗಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಹೀಗಾಗಿ ಕೂಡಲೇ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಸದಸ್ಯ ಬಿ.ಆರ್.ಪಾಟೀಲ್ ಮನವಿ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಸಾಕ್ಷರತೆಯಲ್ಲಿ ಹಿಂದುಳಿದಿವೆ. ಆ ಜಿಲ್ಲೆಗಳಲ್ಲಿಯೇ ಅತಿ ಹೆಚ್ಚು ಶಿಕ್ಷಕ ಹುದ್ದೆಗಳು ಖಾಲಿ ಇವೆ. ಹೀಗಾಗಿ ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಭಾಗದಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಇದೆ. ಜನರು ಬಹಿರ್ದೆಸೆಗೆ ಹೋಗುವುದನ್ನು ತಪ್ಪಿಸಲು ಶೌಚಾಲಯ ನಿರ್ಮಾಣ ಮಾಡಲು ನೀರಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ವಿಶೇಷ ಅನುದಾನ, ಯೋಜನೆಗಳನ್ನು ನೀಡಬೇಕು. ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ವಹಿಸಬೇಕು ಎಂದು ಅವರು ಮನವಿ ಮಾಡಿದರು.