ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು 290 ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.
50 ಪೊಲೀಸರ ತಂಡ ಏಕಕಾಲಕ್ಕೆ ರಾಜಗೋಪಾಲನಗರ, ಆರ್ಎಂಸಿ ಯಾರ್ಡ್, ಪೀಣ್ಯ ಸೇರಿದಂತೆ ವಿವಿಧ ನಗರಗಳಲ್ಲಿನ ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.
ಈ ಪೈಕಿ 234 ಮನೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, 177 ರೌಡಿಗಳು ಮನೆಯಲ್ಲಿರಲಿಲ್ಲ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳಲ್ಲಿಯೂ ತಪಾಸಣೆ ನಡೆದಿದೆ. ಸುಬ್ರಹ್ಮಣ್ಯಪುರ ಉಪವಿಭಾಗದ ವ್ಯಾಪ್ತಿಯಲ್ಲಿ 125, ವಿವಿ ಪುರಂ ವ್ಯಾಪ್ತಿಯಲ್ಲಿ 76, ಜಯನಗರ ವ್ಯಾಪ್ತಿಯಲ್ಲಿ 33 ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಆದರೆ, ರೌಡಿಶೀಟರ್ ಮನೆಗಳಲ್ಲಿ ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ.