ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಬಡ ಜನರಿಗೆ ತುಂಬಾ ಸಹಾಯವಾಗುತ್ತಿದೆ. ಇಡೀ ಜಗತ್ತು ಈ ಯೋಜನೆ ಮೆಚ್ಚಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಜೆಟ್ ಭಾಷಣದಲ್ಲಿ ಸಿಎಂ, ಅನ್ನಭಾಗ್ಯ ಯೋಜನೆಗಳ ಮೂಲಕ ಕೋಟ್ಯಂತರ ಜನರ ಕೈಗೆ ಹಂಚಿಕೆ ಮಾಡಲಾಗುತ್ತಿದೆ. ಈ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ವಾರ್ಷಿಕ 50 ಸಾವಿರ ರೂ. ನಿಂದ 55 ಸಾವಿರ ರೂ.ಗಳವರೆಗೆ ಸಿಗುತ್ತಿದೆ. ಮುಂದೆ ದಿನಕಳೆದಂತೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಮತ್ತು ಸಾಮಾಜಿಕ ಅನುಕೂಲಗಳು ಮತ್ತಷ್ಟು ಗೋಚರವಾಗಲಿವೆ. ಹಲವು ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ನಮ್ಮ ಕೆಲಸದ ಅಧ್ಯಯನ ನಡೆಸಿ, ಶ್ಲಾಘಿಸಿವೆ ಎಂದು ಹೇಳಿದ್ದಾರೆ.
ಬಸ್ ಹತ್ತುವ ಮುನ್ನ ತಲೆಬಾಗಿ ನಮಸ್ಕರಿಸಿದ ಮಹಿಳೆಯ ಮುಖದಲ್ಲಿದ್ದ ಸಂತೋಷ, ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಲಕ್ಷಾಂತರ ಮಹಿಳೆಯರ ಪ್ರಾರ್ಥನೆ, ಯುವನಿಧಿಯಡಿ ನೆರವು ಪಡೆದ ನಿರುದ್ಯೋಗಿ ಯುವಕನ ಆನಂದಭಾಷ್ಪ ಗ್ಯಾರಂಟಿ ಯೋಜನೆಗಳ ಮೇಲೆ ನನ್ನ ನಂಬಿಕೆಯನ್ನು ಮತ್ತಷ್ಟು ಹೆಚ್ಚಿಸಿವೆ. ಆದರೆ, ವಿರೋಧಿಗಳು ಗ್ಯಾರಂಟಿ ಯೋಜನೆಗಳನ್ನು ಬಿಟ್ಟ ಭಾಗ್ಯಗಳೆಂದು ಬಣ್ಣಿಸಿ ರಾಜ್ಯ ದಿವಾಳಿಯಾಗಿದೆ ಎನ್ನುತ್ತಿವೆ ಎಂದು ತಿರುಗೇಟು ನೀಡಿದ್ದಾರೆ.