ಬಿಜೆಪಿ ಅಸತ್ಯ & ಹಿಂಸೆ ಹಾದಿಯಲ್ಲಿ ಸಾಗ್ತಿದೆ : ಸಿದ್ದರಾಮಯ್ಯ Siddaramaiah saaksha tv
ಬೆಂಗಳೂರು : ಗಾಂಧಿಯವರು ಸತ್ಯ ಮತ್ತು ಅಹಿಂಸೆಯ ಮಾರ್ಗ ತೋರಿದ್ದರೆ, ಭಾರತೀಯ ಜನತಾ ಪಕ್ಷ ಅಸತ್ಯ ಮತ್ತು ಹಿಂಸೆಯ ಹಾದಿಯಲ್ಲಿ ಸಾಗುತ್ತಿದೆ ಎಂದು ರಾಜ್ಯ ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ಮಹಾತ್ಮ ಗಾಂಧೀಜಿಯವರು ಭಾರತಕ್ಕಷ್ಟೇ ಸೀಮಿತವಾಗಿರದೆ, ವಿಶ್ವನಾಯಕರಾಗಿದ್ದಾರೆ. ನಮ್ಮದೇ ದೇಶದ ಕೇಂದ್ರ ಬಿಜೆಪಿ ಸರ್ಕಾರ ಗಾಂಧಿ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ, ಅವರ ಬಗ್ಗೆ ಹಗುರಾಗಿ ಮಾತನಾಡುವ ಮೂಲಕ ಮಹಾನ್ ವ್ಯಕ್ತಿಗೆ ಅಪಮಾನ ಮಾಡುತ್ತಿದೆ.
ನೆಲ್ಸನ್ ಮಂಡೇಲಾ ಅವರಿಗೆ ಬ್ರಿಟಿಷರ ವಿರುದ್ಧ ಹೋರಾಡಲು ಸ್ಪೂರ್ತಿನೀಡಿದ್ದು ಗಾಂಧೀಜಿಯವರ ವಿಚಾರಧಾರೆ. ಮಾರ್ಟೀನ್ ಲೂಥರ್ ಕಿಂಗ್ ಅವರಿಂದ ಬರಾಕ್ ಒಬಾಮ ವರೆಗೆ ಜಗತ್ತಿನಾದ್ಯಂತ ಹೋರಾಟಗಾರರಿಗೆ ಗಾಂಧಿ ತತ್ವ ಇಂದಿಗೂ ದಾರಿದೀಪವಾಗಿದೆ.
ಗಾಂಧಿಯವರು ಸತ್ಯ ಮತ್ತು ಅಹಿಂಸೆಯ ಮಾರ್ಗ ತೋರಿದ್ದರೆ, ಭಾರತೀಯ ಜನತಾ ಪಕ್ಷ ಅಸತ್ಯ ಮತ್ತು ಹಿಂಸೆಯ ಹಾದಿಯಲ್ಲಿ ಸಾಗುತ್ತಿದೆ. ನರೇಂದ್ರ ಮೋದಿ ಅವರ ಮಾತು ಮತ್ತು ಕೃತಿಗಳೆರಡು ತದ್ವಿರುದ್ಧವಾಗಿದೆ. ಮೋದಿ ಅವರು ಯಾವುದನ್ನು ಉಳಿಸುತ್ತೇನೆ ಎನ್ನುತ್ತಾರೋ ಅದನ್ನು ನಾಶ ಮಾಡಲು ಹೊರಟಿದ್ದಾರೆ ಎಂದರ್ಥ.
ಮಹಾತ್ಮ ಗಾಂಧಿಯವರ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಬಿಜೆಪಿಯವರು ದೇಶಭಕ್ತ ಎಂದು ಕರೆಯುತ್ತಾರೆ. ಬಿಜೆಪಿ ಯವರ ರಕ್ತದಾಹಿ, ವಿದ್ವಂಸಕ ಮನಸ್ಥಿತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ? ಇಂತಹ ಪಕ್ಷ ಅಧಿಕಾರದಲ್ಲಿ ಇದ್ದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಉಳಿಯಲು ಹೇಗೆ ಸಾಧ್ಯ?
ಕಳೆದು ಹತ್ತು ತಿಂಗಳುಗಳಿAದ ರೈತರು ದೇಶಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಮಾತುಕತೆಯ ಬದಲು, ಕ್ರೌರ್ಯ ಮತ್ತು ಬಲಪ್ರಯೋಗದ ಮೂಲಕ ಅವರ ಹೋರಾಟವನ್ನು ಅಂತ್ಯಗೊಳಿಸಲು ಹೊರಟಿದೆ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ದೂರಿದ್ದಾರೆ.