ಸತ್ಯ ಹೇಳಿರುವ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದ : ಕಟೀಲ್ Congress saaksha tv
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಕಾಂಗ್ರೆಸ್ ಮುಖಂಡ ಸಲೀಂ ಹೇಳಿಕೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಅವರ ಪಕ್ಷದವರೇ ಹೇಳಿರುವ ಮಾತುಗಳನ್ನು ರಾಜ್ಯದ ಜನ ಕೇಳುತ್ತಿದ್ದಾರೆ. ಡಿಕೆಶಿ ಮೇಲೆ ಇಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ.
ತಕ್ಕಡಿ ಮೇಲೆಳುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ಸಿಗೆ ಭವಿಷ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡರೇ ಗುಟ್ಟಾಗಿ ಒಪ್ಪಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ರಾಜ್ಯಾಧ್ಯಕ್ಷರಾಗಿ ಇದ್ದರೆ ಪಕ್ಷ ನಿರ್ನಾಮವಾಗಲಿದೆ ಎಂದು ಕಾಂಗ್ರೆಸ್ಸಿಗರು ಹೇಳಿರುವುದು ತಡವಾಗಿಯಾದರೂ ಜ್ಞಾನೋದಯವಾದಂತಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕುಳಿತು ಸತ್ಯ ಹೇಳಿರುವ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳು. ನಿಮ್ಮ ಮಾತುಗಳನ್ನು ಜನರಿಗೆ ತಲುಪಿಸಿರುವ ಮಾಧ್ಯಮಗಳಿಗೆ ಅಭಿನಂದನೆ ಎಂದು ಬರೆದುಕೊಂಡಿದ್ದಾರೆ.