ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ : ಸಿದ್ದರಾಮಯ್ಯ
ಬೆಂಗಳೂರು : ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿಯ ಪ್ರಾಯಣಕ್ಕೆ ಅಪಾಯದ ಸಾಧ್ಯತೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಶ್ರೀಕಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ..
ಬಿಟ್ ಕಾಯಿನ್ ಹಗರಣದ ಸೂತ್ರಧಾರನೆನ್ನಲಾದ ಶ್ರೀಕೃಷ್ಣ/ ಶ್ರೀಕಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. ವಿಶ್ವದಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಶಾಲಿಗಳು ಷಾಮೀಲಾಗಿರುವ ಅನುಮಾನದ ಹಿನ್ನೆಲೆಯಲ್ಲಿ ಈ ಭದ್ರತೆ ಅಗತ್ಯವಾಗಿದೆ.
ಬಿಟ್ ಕಾಯಿನ್ ಹಗರಣ ಸ್ಪೋಟಗೊಂಡ ನಂತರ ಸಣ್ಣ ಮಟ್ಟದ ಆರೋಪದ ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ, ಅಷ್ಟೇ ನಾಟಕೀಯವಾಗಿ ಜಾಮೀನು ಮೇಲೆ ಬಿಡುಗಡೆಯಾಗಿರುವುದು ಪೊಲೀಸರ ನಡವಳಿಕೆಗಳ ಬಗ್ಗೆ ಸಂಶಯಗಳಿಗೆ ಕಾರಣವಾಗಿದೆ.
ಕಳೆದ ವರ್ಷ ರಾಜ್ಯ ಪೆÇಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ. ಆ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತಮ್ಮ ಮಗನಿಗೆ ಪೆÇಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು ಎನ್ನುವುದು ಗಮನಾರ್ಹ.
ಶ್ರೀಕಿ ಈಗಲೂ ಡ್ರಗ್ ವ್ಯಸನಿಯೇ? ವ್ಯಸನಿಯಾಗಿದ್ದರೆ ಪೊಲೀಸರು ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ? ಡ್ರಗ್ಸ್ ವ್ಯಸನಿ ಎನ್ನುವುದು ಪರೀಕ್ಷೆಯಿಂದ ದೃಡಪಟ್ಟಿದ್ದರೆ ಸೂಕ್ತ ಚಿಕಿತ್ಸೆ ನೀಡಲಾಗಿದೆಯೇ? ಈ ಬಗ್ಗೆ ಮುಖ್ಯಮಂತ್ರಿ ಮತ್ತು ರಾಜ್ಯ ಗೃಹ ಸಚಿವರು ಮಾಹಿತಿ ನೀಡಬೇಕು.
ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ ಅವಲಂಬಿಸಿರುವ ‘ಬಿಳಿಕಾಲರ್ ಅಪರಾಧ’. ಇದಕ್ಕೆ ಸಂಬಂಧಿಸಿದ ಖಾತೆಗಳ ಪಾಸ್ ವರ್ಡ್ ಸೇರಿದಂತೆ ಬಹಳಷ್ಟು ಮಾಹಿತಿಗಳು ಶ್ರೀಕಿಯ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ ಇದೆ.
ಮೊದಲ ಬಾರಿ ಬಿಟ್ ಕಾಯಿನ್ ಸೂತ್ರಧಾರ ಶ್ರೀಕಿ ಬಂಧನ ಮತ್ತು ಜಾಮೀನು ಮೇಲೆ ಬಿಡುಗಡೆಗೊಂಡಾಗ ಗೃಹ ಸಚಿವರಾಗಿದ್ದವರು ಈಗಿನ ಮುಖ್ಯಮಂತ್ರಿ ಬೊಮ್ಮಾಯಿ, ಆರ್.ಅಶೋಕ್ ಅವರಿಗ್ಯಾಕೆ ಇಷ್ಟೊಂದು ಆಸಕ್ತಿ?
ನಾನು ಮುಖ್ಯಮಂತ್ರಿಯಾಗಿದ್ದಾಗ ಬಿಟ್ ಕಾಯಿನ್ ಹಗರಣ ಎಲ್ಲಿಯಾದರೂ ವರದಿಯಾಗಿತ್ತೇ? ಯಾರಾದರೂ ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದರೆ? ಆ ಕಾಲದಲ್ಲಿ ಅವರಿಗೆ ಇದು ಗೊತ್ತಿತ್ತೇ? ಗೊತ್ತಿದ್ದರೂ ಮುಚ್ಚಿಟ್ಟಿದ್ದರೇ?
ನಾನು ಮುಖ್ಯಮಂತ್ರಿಯಾಗಿದ್ದಾಗ ಶ್ರೀಕಿ ವಿರುದ್ಧ ಯಾವ ದೂರೂ ದಾಖಲಾಗಿರಲಿಲ್ಲ. ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು ಬಿಜೆಪಿ ಕಾಲದಲ್ಲಿ. ನೀವ್ಯಾಕೆ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಕೇಳುತ್ತಿದ್ದೇವೆ. ಈ ಪ್ರಶ್ನೆಗೆ ಮೊದಲು ಉತ್ತರಿಸಿ.
ಎರಡು ಬಾರಿ ಶ್ರೀಕಿಯನ್ನು ಬಂಧಿಸಿದ್ದು, ಬೇಲ್ ಮೇಲೆ ಬಿಡುಗಡೆ ಮಾಡಿದ್ದು, ಚಾರ್ಜ್ ಶೀಟ್ ದಾಖಲಿಸಿದ್ದು ಬಿಜೆಪಿ ಸರ್ಕಾರ. ಹೀಗಾಗಿ ಬಸವರಾಜ ಬೊಮ್ಮಾಯಿ ಈ ಕೆಲಸ ಅವರಿಂದ ಆಗಲ್ಲ ಎಂದರೆ ಅಧಿಕಾರ ಬಿಟ್ಟು ಹೋಗಲಿ ಎಂದು ಗರಂ ಆಗಿದ್ದಾರೆ.