Bangalore | ಯೋಗ ದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಲಭ್ಯ : ವಿ.ಸೋಮಣ್ಣ
ಬೆಂಗಳೂರು : ಗೋವಿಂದರಾಜನಗರದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಶ್ರೀ ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನವನ್ನು ವಸತಿ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ಯೋಗಾಚರಣೆಯಿಂದ ಮನುಷ್ಯನಿಗೆ ಉತ್ತಮ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಲಭಿಸುತ್ತದೆ . ಹೀಗಾಗಿ ಪ್ರತಿಯೊಬ್ಬರೂ ಯೋಗಾಚರಣೆಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಬಳಿಕ ಯೋಗಪಟುಗಳೊಂದಿಗೆ ಯೋಗಾಸನ ಮಾಡಿ, ನಾವೆಲ್ಲರೂ ಮಾನವೀಯತೆಗಾಗಿ ಯೋಗ ಎಂಬುದನ್ನು ಸಾರೋಣ ಎಂಬ ಸಂದೇಶವನ್ನು ನೀಡಿದರು.
ಇನ್ನು, ಯೋಗ ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ.
ಹಾಗೆಯೇ ಪ್ರಕೃತಿ ಮತ್ತು ಮನುಷ್ಯ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ಆರೋಗ್ಯ ಮತ್ತು ಯೋಗಕ್ಷೇಮದ ಸಮಗ್ರ ವಿಧಾನವಾಗಿದೆ ಹೀಗಾಗಿ ನಮ್ಮ ಯೋಗಾಚರಣೆ ಕೇವಲ ಇಂದು ಒಂದು ದಿನಕ್ಕೆ ಸೀಮಿತವಾಗಿರಬಾರದು.
ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಪ್ರತಿವರ್ಷ ಯೋಗ ದಿನಾಚರಣೆಯು ಯೋಗ, ಧ್ಯಾನ, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ.
ಇದು ಭಾರತೀಯರಾಗಿ ನಮಗೆ ಹೆಮ್ಮೆಯ ವಿಚಾರವಾಗಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಕಷ್ಟು ಯೋಗ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.
ಕೆಲವೇ ತಿಂಗಳುಗಳಲ್ಲಿ ನವೀಕರಣಗೊಂಡ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ, ಪಂತರಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿರುವ ಸುಸಜ್ಜಿತ ಆಸ್ಪತ್ರೆ ಲೋಕಾರ್ಪಣೆ ಆಗಲಿವೆ ಎಂದರು.
ಈ ಸಂದರ್ಭದಲ್ಲಿ ಶ್ರೀ ವಿ.ಸೋಮಣ್ಣ ಪ್ರತಿಷ್ಠಾನದ ಶ್ರೀಮತಿ ಶೈಲಜ ಸೋಮಣ್ಣ, ಖ್ಯಾತ ಚಿತ್ರನಟಿ ಪ್ರಿಯಾಂಕಾ ಉಪೇಂದ್ರ, ಯೋಗಗುರುಗಳು, ಯೋಗಪಟುಗಳು, ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.