Siddaramaiah | ಕಾರು-ಜೀಪು ಬಿಟ್ಟು ಎಡವದೆ ನಡೆದುಕೊಂಡು ಹೋಗಿ : ಸಿಎಂಗೆ ಸಿದ್ದು ಸವಾಲು
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಜನಸಂಕಲ್ಪ ಯಾತ್ರೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದ್ದು, ಎರಡು ಸವಾಲುಗಳನ್ನು ಎಸೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನನ್ನ ಎರಡೇ ಎರಡು ಸವಾಲು..
- ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ.
- ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.

ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಬಿ.ಎಸ್.ಯಡಿಯೂರಪ್ಪ ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು.
ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಬಸವರಾಜ ಬೊಮ್ಮಾಯಿ ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM’’ ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.








