ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಜನರಿಗೆ ದ್ರೋಹ : ಸಿದ್ದರಾಮಯ್ಯ
ಬೆಂಗಳೂರು : ಲಸಿಕೆ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಜನರಿಗೆ ದ್ರೋಹವೆಸಗಿವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ಲಸಿಕೆ ಲಭ್ಯ ಇಲ್ಲ ಎಂದಾದರೆ ಎಲ್ಲರಿಗೂ ಹಾಕುವುದಾಗಿ ಏಕೆ ಹೇಳಬೇಕಿತ್ತು? ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡುವ ಅಗತ್ಯವಾದರೂ ಏನಿತ್ತು? ಲಸಿಕೆ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಬಿಜೆಪಿ
ಸರ್ಕಾರಗಳು ಜನರಿಗೆ ದ್ರೋಹವೆಸಗಿವೆ.
18 ವರ್ಷ ಮೀರಿದ ಎಲ್ಲರಿಗೂ ಲಸಿಕೆ ಹಾಕುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದರು. ಆದರೆ, 45, 60 ವರ್ಷ ಮೀರಿದವರಿಗೇ ಇನ್ನೂ ಲಸಿಕೆ ಸಿಗುತ್ತಿಲ್ಲ. ಮೊದಲ ಡೋಸ್ ಪಡೆದವರೇ ಎರಡನೇ ಡೋಸ್ ಗೆ ಪರದಾಡುತ್ತಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೇ ಒಂದರಂದು ಲಸಿಕೆ ಅಭಿಯಾನ ಉದ್ಘಾಟಿಸಿದರು. ಆಗ ವ್ಯಾಕ್ಸಿನ್ ಎಲ್ಲಿತ್ತು? ಮುಖ್ಯಕಾರ್ಯದರ್ಶಿಗಳು ಮೇ 3 ಅಥವಾ 4ನೇ ವಾರದಲ್ಲಿ ಲಸಿಕೆ ಬರುತ್ತದೆ ಎಂದಿದ್ದಾರೆ. ಆರೋಗ್ಯ ಸಚಿವರು 15 ದಿನ ಲಸಿಕೆ ಹಾಕಲು ಸಾಧ್ಯವಿಲ್ಲ ಎನ್ನುತ್ತಾರೆ. ಇದನ್ನು ಜವಾಬ್ದಾರಿಯುತ ಸರ್ಕಾರ ಎಂದು ಕರೆಯಲು ಆಗುವುದೇ?
ಜನರು ಲಸಿಕೆಗಾಗಿ ಸರತಿ ಸಾಲಿನಲ್ಲಿ ದಿನಗಟ್ಟಲೇ ಕಾಯುತ್ತಿದ್ದಾರೆ, ಮತ್ತೊಂದೆಡೆ ಆಕ್ಸಿಜನ್ ಸಿಗದೆ ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 2ನೇ ಅಲೆ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತಜ್ಞರು ವರದಿ ನೀಡಿದ್ದರು. ಆದರೆ ಆ ವರದಿಯನ್ನು ಉಭಯ ಸರ್ಕಾರಗಳು ನಿರ್ಲಕ್ಷಿಸಿದ ಪರಿಣಾಮವಾಗಿ ಕೆಟ್ಟ ಪರಿಸ್ಥಿತಿ ಎದುರಿಸುವಂತಾಗಿದೆ.
ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆಯಾಗಿದೆ. ಆದರೆ, ಕಟ್ಟುನಿಟ್ಟಾಗಿ ಮಾಡಿಲ್ಲ. ವಲಸೆ ಹೋಗಿರುವ ಕಾರ್ಮಿಕರಿಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ. ಅವರು ಬದುಕುವುದಾದರೂ ಹೇಗೆ? ಬಡಜನರ ಜೀವ ಉಳಿಯಬೇಕು ಎಂದರೆ ಕೂಡಲೇ ಬಿಜೆಪಿ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಬೇಕು.
18ವರ್ಷ ಮೀರಿದವರು ರಾಜ್ಯದಲ್ಲಿ 3.26 ಕೋಟಿ ಜನ ಇದ್ದಾರೆ. ಅವರಿಗೆ ಆರೂವರೆ ಕೋಟಿ ಡೋಸ್ ಲಸಿಕೆ ಬೇಕು. 2-3 ತಿಂಗಳಲ್ಲಿ ಎಲ್ಲರಿಗೂ ವ್ಯಾಕ್ಸಿನ್ ನೀಡಿದಾಗ ಮಾತ್ರ ಈ ರೋಗ ತಡೆಯಲು ಸಾಧ್ಯ. 3ನೇ ಅಲೆ ಬಾಧಿಸುವ ಮುನ್ನ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಲಸಿಕೆ ನೀಡಬೇಕು ಎಂದು ಬಿಜೆಪಿ ಸರ್ಕಾರವನ್ನು ಆಗ್ರಹಿಸಿದ್ದಾರೆ.