ನವದೆಹಲಿ : ದೇಶದಲ್ಲಿ ಮಾರಕ ಕೊರೊನಾ ವೈರಸ್ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಮೇ 17ಕ್ಕೆ ಲಾಕ್ ಡೌನ್ 3.0 ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಹಲವು ವಿಚಾರಗಳ ಕುರಿತು ದೇಶವನ್ನುದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.
ನಿನ್ನೆ ಮಧ್ಯಾಹ್ನ 3 ಗಂಟೆಯಿಂದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸುದೀರ್ಘ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಆಯಾ ರಾಜ್ಯಗಳಲ್ಲಿನ ಸದ್ಯದ ಪರಿಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೇ, ವಲಯವಾರು ವರದಿ ನೀಡುವಂತೆಯೂ ಸೂಚನೆ ನೀಡಿದ್ದರು. ಈ ವಿಡಿಯೋ ಕಾನ್ಫರೆನ್ಸ್ ಮೀಟಿಂಗ್ ವೇಳೆ ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕ ಸಿಎಂ ಯಡಿಯೂರಪ್ಪ ಅವರು ಸದ್ಯಕ್ಕೆ ರೈಲು ಸಂಚಾರಕ್ಕೆ ಅನುಮತಿ ನೀಡದಿರುವುದು ಒಳಿತು ಎಂಬ ಸಲಹೆ ನೀಡಿದ್ದರು. ಇದರೊಂದಿಗೆ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯಗಳ ಆರ್ಥಿಕತೆಗೆ ಭಾರಿ ಹೊಡೆತ ಬಿದ್ದಿದ್ದು, ಅದಕ್ಕಾಗಿ ರೆಡ್ ಝೋನ್, ಕಂಟೈನ್ ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ಮತ್ತಷ್ಟು ಸಡಿಲಗೊಳಿಸಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವಂತೆಯೂ ಎಲ್ಲ ರಾಜ್ಯಗಳ ಸಿಎಂಗಳು ಮನವಿ ಮಾಡಿದ್ದರು. ಇದೇ ವೇಳೆ, ಕೆಲ ರಾಜ್ಯಗಳು ವಿಶೇಷ ಪ್ಯಾಕೇಜ್ ಘೋಷಿಸುವಂತೆಯೂ ಮನವಿ ಮಾಡಿದ್ದಾರೆ.
ಈ ನಿಟ್ಟಿನಲ್ಲಿ ಇಂದು ಮೋದಿಯವರು ಮಾಡುತ್ತಿರುವ ಭಾಷಣ ಮಹತ್ವದ್ದಾಗಿದ್ದು ಲಾಕ್ ಡೌನ್ ಸಡಿಲಿಕೆ ಬಗ್ಗೆ ಪ್ರಧಾನಿ ಏನು ಹೇಳುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.








