ಬೆಂಗಳೂರು, ಮೇ 25 : ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ವಿವಿಧ ಇಲಾಖೆಗಳಲ್ಲಿರುವ ಸಹಕಾರ ಇಲಾಖೆಯ ಅಧಿಕಾರಿಗಳನ್ನು ಮರಳಿ ಮಾತೃ ಇಲಾಖೆಗೆ ಕರೆತರುವ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಇತ್ತೀಚೆಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದು, ಹಲವಾರು ವರ್ಷಗಳಿಂದ ಸಹಕಾರ ಇಲಾಖೆಯ ಅಧಿಕಾರಿಗಳು ಇನ್ನಿತರ ಇಲಾಖೆಗಳಲ್ಲಿ ನಿಯೋಜನೆಗೊಂಡು ಕಾರ್ಯನಿರ್ವಹಿಸುತ್ತಿರುವ ವಿಷಯ ಅವರ ಗಮನಕ್ಕೆ ಬಂದಿದೆ. ಇದರಿಂದ ಅಸಮಾಧಾನಗೊಂಡ ಸಚಿವರು ಯಾವ ಯಾವ ಸಹಕಾರ ಇಲಾಖೆಯ ಅಧಿಕಾರಿಗಳು ಎಲ್ಲೆಲ್ಲಿ ಕಾರ್ಯ ನಿರ್ವಹಿಸುತ್ತಾರೆ, ಇಲಾಖೆಯಲ್ಲಿ ಯಾವ ಹುದ್ದೆಗಳಿಗೆ ಅತಿ ಅವಶ್ಯಕತೆ ಇದೆ ಎಂಬ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಉನ್ನತ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿಗಳಿಗೆ ಈ ಕುರಿತು ಪತ್ರ ಬರೆದ ಸಚಿವರು ಇನ್ನಿತರ ಇಲಾಖೆಗಳಲ್ಲಿ ನಿಯೋಜನೆಗೊಂಡು ಕಾರ್ಯನಿರ್ವಹಿಸುತ್ತಿರುವ ಸಹಕಾರ ಇಲಾಖೆಯ ಅಧಿಕಾರಿಗಳನ್ನು ಕೂಡಲೇ ಮಾತೃ ಇಲಾಖೆಗೆ ಹಿಂದಿರುಗುವಂತೆ ಕ್ರಮ ಕೈಗೊಳ್ಳಬೇಕೆಂದು ಕೋರಿದರು. ನಂತರ ಸಚಿವ ಸೋಮಶೇಖರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಹಕಾರ ಇಲಾಖೆ ಸಭೆ ನಡೆಸಿದ ಸಂದರ್ಭದಲ್ಲಿ, ಇಲಾಖೆಯ ಸಿಬ್ಬಂದಿಗಳು ಬೇರೆಡೆ ನಿಯೋಜನೆಗೊಂಡಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ತಕ್ಷಣವೇ ಕ್ರಮ ಕೈಗೊಂಡು ಮಾತೃ ಇಲಾಖೆ ಸೇವೆಗೆ ಬಳಸಿಕೊಳ್ಳಿ ಎಂದು ಸೂಚಿಸಿದರು.
ಈ ಬಗ್ಗೆ ಮಾತನಾಡಿರುವ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಇತ್ತೀಚೆಗೆ ನಾನು ವಿಕಾಸಸೌಧದ ಕಚೇರಿಯಲ್ಲಿ ಸಹಕಾರ ಇಲಾಖೆಯ ಉನ್ನತಾಧಿಕಾರಿಗಳ ಸಭೆ ಕರೆದಿದ್ದೆ. ಆ ಸಮಯದಲ್ಲಿ ನಮ್ಮಲ್ಲಿ ಸಾಕಷ್ಟು ಸಿಬ್ಬಂದಿಗಳು ನೇಮಕವಾಗಿದ್ದರೂ ಅವರು ಬೇರೆ ಬೇರೆ ಇಲಾಖೆಯಲ್ಲಿ ಡೆಪ್ಯುಟೇಷನ್ ಮೇಲೆ ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂತು. ನಮ್ಮ ಇಲಾಖೆಯಲ್ಲಿಯೇ ಸಾಕಷ್ಟು ಕೆಲಸಗಳು ಬಾಕಿ ಇರುವಾಗ ಹೇಗೆ ಅವರನ್ನು ಡೆಪ್ಯುಟೇಷನ್ ಮೂಲಕ ಬೇರೆಡೆ ಕಳುಹಿಸಲಾಗಿದೆಯೋ ಅರ್ಥವಾಗಿಲ್ಲ. ಈ ನಿಟ್ಟಿನಲ್ಲಿ ಇಲಾಖೆಯನ್ನು ಬಲಗೊಳಿಸಬೇಕಿದ್ದು, ಅವರನ್ನೆಲ್ಲ ವಾಪಸ್ ಕರೆಸಿಕೊಳ್ಳಲು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಇದಕ್ಕೆ ಮುಖ್ಯಮಂತ್ರಿಗಳು ಸಹ ಒಪ್ಪಿಗೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಕ್ರಮಗಳನ್ನು ಕೈಗೊಂಡು ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವೆ ಎಂದು ಹೇಳಿದ್ದಾರೆ.