ಆ್ಯಸಿಡ್ ದಾಳಿ | ಆರೋಪಿ ಬಂಧನಕ್ಕೆ ಆಗ್ರಹಿಸಿ ಎಎಪಿ ಪ್ರತಿಭಟನೆ
ಬೆಂಗಳೂರು: ಆ್ಯಸಿಡ್ ದಾಳಿಕೋರ ನಾಗೇಶ್ನನ್ನು ಬಂಧಿಸಿ, ಗಲ್ಲುಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಎಪಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ಮಾತನಾಡಿ, “ರಾಜ್ಯಾದ್ಯಂತ ಗಂಭೀರ ಅಪರಾಧಗಳ ಪ್ರಮಾಣ ಏರಿಕೆಯಾಗುತ್ತಿರುವುದು ಆತಂಕಕಾರಿ. ಅಸಮರ್ಥರು ಗೃಹಸಚಿವ ಹುದ್ದೆ ಅಲಂಕರಿಸಿರುವುದರಿಂದ ಜನರಿಗೆ ಕಾನೂನಿನ ಭಯವೇ ಇಲ್ಲವಾಗಿದೆ. ಆ್ಯಸಿಡ್ ದಾಳಿಕೋರ ನಾಗೇಶ್ನನ್ನು ಶೀಘ್ರವೇ ಬಂಧಿಸಬೇಕು ಹಾಗೂ ಗಲ್ಲುಶಿಕ್ಷೆಗೆ ಒಳಪಡಿಸಬೇಕು.
ಅಲ್ಲದೇ ಉದ್ಯೋಗಿಗೆ ರಕ್ಷಣೆ ನೀಡುವುದರಲ್ಲಿ ವಿಫಲರಾದ ಮುತ್ತೂಟ್ ಫೈನಾನ್ಸ್ ಕಂಪನಿಯ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರವು ತಡಮಾಡದೇ ಸಂತ್ರಸ್ತ ಯುವತಿಗೆ ಒಂದು ಕೋಟಿ ರೂಪಾಯಿ ಪರಿಹಾರ ವಿತರಿಸಬೇಕು” ಎಂದು ಆಗ್ರಹಿಸಿದರು.
ಇನ್ನೂ “ಪೊಲೀಸ್ ಇಲಾಖೆಯ ಮೇಲೆ ಹಿಡಿತ ಸಾಧಿಸುವಲ್ಲಿ ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ. ಘಟನೆ ನಡೆದು ಮೂರು ದಿನಗಳಾದರೂ ಆರೋಪಿಯನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ಗೃಹ ಸಚಿವರ ನಿರ್ಲಕ್ಷ್ಯವೇ ಕಾರಣ.
ಹಾಗೇ ಉದ್ಯೋಗಸ್ಥ ಮಹಿಳೆಯರ ರಕ್ಷಣೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು. ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗಾಗಿ ಹೆಚ್ಚಿನ ನಿಗಾ ವಹಿಸಬೇಕು” ಎಂದು ಕುಶಲಸ್ವಾಮಿ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಎಪಿ ಮುಖಂಡರಾದ ಸುಹಾಸಿನಿ ಫಣಿರಾಜ್, ಪಲ್ಲವಿ ಚಿದಂಬರ್, ಮರಿಯಾ ಹುಸೈನ್, ಶಿಲ್ಪ, ಸುಮನ್, ಗಾಯತ್ರಿ, ಸುರೇಶ್ ರಾಥೋಡ್, ಚನ್ನಪ್ಪ, ಸೀತಾರಾಮ್, ಶಶಿಧರ್ ಆರಾಧ್ಯ, ಶಾಮ್ ಪ್ರಕಾಶ್ ಹಾಗೂ ಇನ್ನಿತರ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.









