ಬೆಂಗಳೂರು : ಕೊರೊನಾ ವೈರಸ್ ಕಾಟದ ನಡುವೆ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಮೈತ್ರಿ ಪಕ್ಷವನ್ನು ಅಧಿಕಾರದಿಂದ ಕೆಡವಿ ಗದ್ದುಗೆ ಅಲಂಕರಿಸಿರುವ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯುತ್ತಿಲ್ಲ ಎಂದು ಮತ್ತೆ ಬಹಿರಂಗವಾಗಿದೆ. ರಾಜ್ಯಸಭಾ ಟಿಕೆಟ್ ನೀಡುವ ವಿಚಾರವಾಗಿ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಸಿಎಂ ಬಿ.ಎಸ್, ಯಡಿಯೂರಪ್ಪ ಅವರಿಗೆ ಉತ್ತರ ಕರ್ನಾಟಕದ ಶಾಸಕರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ರಾಜ್ಯಸಭಾ ಚುನಾವಣೆಗೆ ರಮೇಶ್ ಕತ್ತಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದಲ್ಲಿ 20 ಕ್ಕೂ ಹೆಚ್ಚು ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಅದರಲ್ಲೂ ಶಾಸಕ ಯತ್ನಾಳ್ ಅವರು ಯಡಿಯೂರಪ್ಪನವರ ವಿರುದ್ಧ ಬಹಿರಂಗವಾಗಿಯೇ ಬಂಡಾಯದ ಬಾವುಟ ಹಾರಿಸಿದ್ದಾರೆ. ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ನನ್ನ ನಾಯಕರಾಗಿದ್ದು, ಯಡಿಯೂರಪ್ಪನವರು ನನಗೆ ಮುಖ್ಯಮಂತ್ರಿಗಳಷ್ಟೇ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅಲ್ಲದೆ ನಾಯಕತ್ವ ಬದಲಾವಣೆಗೆ ಕೇಂದ್ರದ ವರಿಷ್ಠರು ಮುಂದಾದರೆ ಅದಕ್ಕೂ ಸೈ ಎನ್ನುವ ಮೂಲಕ ಪರೋಕ್ಷವಾಗಿ ಯಡಿಯೂರಪ್ಪನವರ ಬದಲಾವಣೆ ಇಂಗಿತ ವ್ಯಕ್ತಪಡಿಸಿದ್ದಾರೆ.
ಇದರ ಮಧ್ಯೆ ಶಾಸಕರ ಸಭೆಯಲ್ಲಿ ಪಾಲ್ಗೊಂಡಿದ್ದ ರಾಜು ಗೌಡ, ಅಂದಿನ ಸಭೆಯಲ್ಲಿ ರಾಜ್ಯಸಭೆ ಟಿಕೆಟ್ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಯಡಿಯೂರಪ್ಪನವರ ನಾಯಕತ್ವದ ಬದಲಾವಣೆ ಪ್ರಶ್ನೆಯೇ ಇಲ್ಲ. ಕೆಲವರು ಸಭೆಯಲ್ಲಿ ನಡೆದಿಲ್ಲವಾದ ವಿಷಯಗಳ ಕುರಿತು ಈಗ ಪ್ರಸ್ತಾಪ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳುವ ಮೂಲಕ ಉಮೇಶ್ ಕತ್ತಿ ಮತ್ತಿತರರ ನಡವಳಿಕೆಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಂದ್ಹಾಗೆ ಈ ಹಿಂದೆಯೂ ಸಹ ಉಮೇಶ್ ಕತ್ತಿ ಅವರು ಬಿಎಸ್ ವೈ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದರು. ಅಲ್ಲದೆ ಉತ್ತರ ಕರ್ನಾಟಕದ ಶಾಸಕರನ್ನು ಒಟ್ಟುಗೂಡಿಸಿ ಸಭೆ ನಡೆಸಿ ಪಕ್ಷಕ್ಕೆ ಬಿಸಿ ಮುಟ್ಟಿಸಿದ್ದರು.








