ಮೋದಿ ರಾಜ್ಯ ಪ್ರವಾಸ – 50,000 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ…
ಎರಡು ದಿನಗಳ ರಾಜ್ಯ ಪ್ರವಾಸದ ಅಂಗವಾಗಿ ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು 50,000 ಕೋಟಿ ಗೂ ಅಧಿಕ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
15,000 ಕೋಟಿ ರೂ.ಗಳ ಮಹತ್ವಾಕಾಂಕ್ಷೆಯ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಬೆಂಗಳೂರು ಮತ್ತು ಕರ್ನಾಟಕದ ಅಭಿವೃದ್ಧಿಗೆ ಚಾಲನೆ ನೀಡಲಿದ್ದಾರೆ. ಇದು ಬೆಂಗಳೂರಿನ ಜನತೆಗೆ ಪ್ರಧಾನಿ ನೀಡುತ್ತಿರುವ ದೊಡ್ಡ ಕೊಡುಗೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದ್ದಾರೆ.
ಇಂದು ಬೆಳಗ್ಗೆ 11.45ಕ್ಕೆ ವಿಶೇಷ ವಿಮಾನದ ಮೂಲಕ ಯಲಹಂಕ ವಾಯುನೆಲೆಗೆ ಪ್ರಧಾನಿ ಆಗಮಿಸಿ, ಸಂಜೆ 4ರ ವರೆಗೆ ಬೆಂಗಳೂರಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ ಮೈಸೂರಿಗೆ ಹೊರಟು ಚಾಮಂಡಿ ಬೆಟ್ಟಕ್ಕೆ ತೆರಳಿ ನಾಡ ದೇವಿಯ ದರ್ಶನ ಪಡೆಯಲಿದ್ದಾರೆ. ಮಂಗಳವಾರ ಬೆಳಿಗ್ಗೆ ಮೈಸೂರಿನಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.
ಶಿಕ್ಷಣ ಸಂಸ್ಥೆಗಳಿಗೆ ರಜೆ
ಪ್ರಧಾನಿ ಮೋದಿ ಇಂದು ನಗರಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಕಾರಣ ಭದ್ರತೆಯ ದೃಷ್ಠಿಯಿಂದ ಪ್ರಧಾನಿ ಸಂಚರಿಸಲಿರುವ ಮಾರ್ಗದಲ್ಲಿ ಬರುವ ನಗರದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ರಜೆ ಘೋಷಿಸಿದೆ.








