ಬೆಂಗಳೂರು : ಕೋವಿಡ್ ನಿಯಂತ್ರಣಕ್ಕೆ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ತಾಲೂಕುಗಳನ್ನು ವಿಭಾಗಿಸಿಕೊಂಡು ತಾಲೂಕು ಕೇಂದ್ರಗಳಲ್ಲಿಯೇ ವಾಸ ಮಾಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.
ಇಂದು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿ, ವಿಜಯಪುರ, ಉಡುಪಿ, ಯಾದಗಿರಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ತಾಲೂಕು ಕೇಂದ್ರಗಳಲ್ಲಿಯೇ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು. ಅಲ್ಲದೆ ಜೂನ್ 08 ರಿಂದ ಲಾಕ್ ಡೌನ್ ಸಡಿಲಿಕೆ ಮಾಡುತ್ತಿರುವುದರಿಂದ ಕಟ್ಟೆಚ್ಚರ ವಹಿಸಿ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ವಲಸಿಗರಿಂದ ಕೋವಿಡ್ 19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಬಿಎಸ್ ವೈ, ಕೋವಿಡ್ 19 ಪರೀಕ್ಷಾ ಕಿಟ್ ಗಳ ಪೂರೈಕೆಯಲ್ಲಿ ವ್ಯತ್ಯಾಸವಾಗಬಾರದು. ಹೋಮ್ ಕ್ವಾರಂಟೈನ್ ನಲ್ಲಿ ಇರುವವರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಬೇಕು, ಪೊಲೀಸ್ ಇಲಾಖೆ ವತಿಯಿಂದ ಗೃಹ ಬಂಧನದಲ್ಲಿರುವವರ ಮನೆಯ ಬಳಿ ಪೇದೆಗಳನ್ನು ನಿಯೋಜಿಬೇಕಲ್ಲದೆ, ಗ್ರಾಮ ಪಂಚಾಯತಿಗಳಲ್ಲಿ ಟಾಸ್ಕ್ ಫೋರ್ಸ್ ರಚಿಸಿ ಇವರ ಬಗ್ಗೆ ನಿಗಾ ವಹಿಸಬೇಕು. ಇನ್ನು ಗ್ರಾಮ ಪಂಚಾಯತಿ ಸದಸ್ಯರಿಗೆ ಈ ಬಗ್ಗೆ ತರಬೇತಿಯನ್ನೂ ನೀಡಲಾಗಿದ್ದು, ಬೂತ್ ಮಟ್ಟದ ತಂಡಗಳೂ ಪ್ರತಿ ದಿನ ವರದಿ ಸಲ್ಲಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹಾಗೇ ಗಡಿ ಭಾಗಗಳಿರುವ ಜಿಲ್ಲೆಗಳು ಕಟ್ಟುನಿಟ್ಟಾಗಿ ಗಡಿ ಪ್ರದೇಶಗಳನ್ನು ಕಾದು, ಅಕ್ರಮ ಪ್ರವೇಶವನ್ನು ತಡೆಯಬೇಕು. ಮೃತ ದೇಹಗಳನ್ನು ಯಾವುದೇ ಕಾರಣಕ್ಕೂ ರಾಜ್ಯದೊಳಗೆ ತರದಂತೆ ನೋಡಿಕೊಳ್ಳಬೇಕೆಂದು ಸಿಎಂ ನಿರ್ದೇಶಿಸಿದರು.
ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಹಾಗೂ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.








