ಬೆಂಗಳೂರು : ರಾಜ್ಯದ ಕೆಲವು ಭಾಗಗಳಲ್ಲಿ ನಾಲ್ಕು ದಿನ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
48 ಗಂಟೆ ಬೆಂಗಳೂರಿನಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಹಗುರವಾಗಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಏ.2ರಿಂದ ಏ.5ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಸರಾಸರಿ 2 ಡಿಗ್ರಿ ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಕೆಲವೆಡೆ ಸರಾಸರಿ 3-4 ಕನಿಷ್ಠ ಉಷ್ಣಾಂಶ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹೀಗಾಗಿ ಜನರು ಬಿಸಿಲಿನ ಬೇಗೆಗೆ ಹೈರಾಣಾಗಿದ್ದಾರೆ.








