5 ವರ್ಷ ಸಂಪೂರ್ಣವಾಗಿ ಸಿಎಂ ಆಗಿ ಅಧಿಕಾರ ಅನುಭವಿಸಿದ್ದ ಸಿದ್ದರಾಮಯ್ಯ ಈಗ ಎರಡನೇ ಬಾರಿ ಸಿಎಂ ಆದರೂ ಕುರ್ಚಿಯ ಕಚ್ಚಾಟದಲ್ಲಿ ಸಿಲುಕಿದ್ದಾರೆ. ಈಗ ಅದು ಬೇರೆಯೇ ವಿಷಯ. ಆದರೆ, ಕಳೆದ ಬಾರಿ 5 ವರ್ಷ ಅಮಾನತ್ತಾಗಿ ಅಧಿಕಾರ ಅನುಭವಿಸಿದರೂ ಒಂದೇ ಒಂದು ಭ್ರಷ್ಟಾಚಾರದ ಆರೋಪವನ್ನು ಅವರ ಮೇಲೆ ವಿಪಕ್ಷಗಳು ಮಾಡದಷ್ಟು ದಕ್ಷವಾಗಿ ಅಧಿಕಾರ ನಡೆಸಿದ್ರು. ಆದರೆ, ಈಗ ಅವರ ಕುಟುಂಬದ ಮೇಲೆ ಆರೋಪವೊಂದು ಕೇಳಿ ಬಂದಿದ್ದು, ಸಿಎಂ ಕುರ್ಚಿಯೊಂದಿಗೆ, ಈ ಆರೋಪ ಕೂಡ ಸಿದ್ದರಾಮಯ್ಯ ಅವರ ನೋವಿಗೆ ಕಾರಣವಾಗುತ್ತಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ನೇತೃತ್ವದಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವೊಂದನ್ನು ಈಗ ಹಲವರು ಮಾಡುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಇಂತಹ ಗಂಭೀರ ಆರೋಪವೊಂದನ್ನು ಮಾಡಿದ್ದು, ರಾಜಕೀಯ ವಲಯದಲ್ಲಿ ಸಂಚಲವನ್ನೇ ಅದು ಮೂಡಿಸುತ್ತಿದೆ.
2019ರಲ್ಲಿ ಮುಡಾ ಸುಪರ್ದಿನಲ್ಲಿ 9 ಸಾವಿರ ನಿವೇಶನಗಳಿದ್ದವು. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಮಾರಿಕೊಳ್ಳಲಾಗಿದೆ. ಹಿಂದಿನ ಬಿಜೆಪಿ ಸರಕಾರ ಹಾಗೂ ಈಗಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನಿಯಮ ಬಾಹಿರವಾಗಿ ನಿವೇಶನ ಹಂಚಿಕೆಯಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತನಿಂದ ಮುಡಾ ಅಧೋಗತಿಗೆ ತಲುಪಿದೆ. ಒಂದಷ್ಟು ನಾಯಕರು, ಅಧಿಕಾರಿಗಳು ಸಿಂಡಿಕೇಟ್ ರಚಿಸಿಕೊಂಡಿದ್ದು, ಈ ದಂಧೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಎಲ್ಲ ಆರೋಪಿಗಳನ್ನೂ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಇದರಲ್ಲಿ ಯತೀಂದ್ರ ಸಿದ್ದರಾಮಯ್ಯರದ್ದು ಪ್ರಮುಖ ಪಾತ್ರವಿದೆ ಎಂದು ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಅವರು ಕಡತಗಳನ್ನು ಇಟ್ಟುಕೊಂಡು ಮುಡಾ ಕಚೇರಿಗೆ ಅಲೆಯುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ಶಾಸಕ ಹರೀಶ್ ಗೌಡ, ರಾಕೇಶ್ ಪಾಪಣ್ಣ, ಮುಡಾದ ಹಾಲಿ ಅಧ್ಯಕ್ಷ ಮರೀಗೌಡ, ಹಿಂದಿನ ಅಧ್ಯಕ್ಷ ಎಚ್.ವಿ. ರಾಜೀವ್, ಹಿಂದಿನ ಆಯುಕ್ತ ನಟೇಶ್, ಈಗಿನ ಆಯುಕ್ತ ದಿನೇಶ್ ಹಾಗೂ ಅವರ ಮೈದುನ ತೇಜಸ್ ಗೌಡ, ಮರಿತಿಬ್ಬೇಗೌಡರ ಶಿಷ್ಯ ಸುದೀಪ್, ದಲ್ಲಾಳಿಗಳಾದ ಉತ್ತಮ್ ಗೌಡ, ಮೋಹನ್ ಸೇರಿದಂತೆ ಹಲವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ನೇರವಾಗಿಯೇ ವಿಶ್ವನಾಥ್ ಆರೋಪಿಸಿದ್ದಾರೆ.
ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಅವರ ಸೋದರ ಸಂಬಂಧಿ ಮಲ್ಲಣ್ಣ ಎಂಬುವರು ಖರೀದಿಸಿದ್ದರು. ನಂತರದಲ್ಲಿ ಈ ಜಮೀನನ್ನು ಪಾರ್ವತಮ್ಮ ಹೆಸರಿಗೆ ದಾನಪತ್ರವಾಗಿ ನೀಡಿದ್ದರು. 1994ರಲ್ಲಿ ಇದರ ಭೂಸ್ವಾಧೀನಕ್ಕೆ ಮುಡಾ ಪ್ರಕಟಣೆ ಹೊರಡಿಸಿತ್ತು. 1998ರಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದಾಗ ಇದನ್ನು ಡಿನೋಟಿಫೈ ಮಾಡಲಾಗಿದೆ. ಇದರಲ್ಲಿ ಸಿದ್ದರಾಮಯ್ಯ ಕುಟುಂಬದವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಈಗ ಈ ವಿಷಯ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ, ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ‘ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ವ್ಯಂಗ್ಯವಾಡಿರುವ ಅಶೋಕ, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ 4,000 ಕೋಟಿ ರೂಪಾಯಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ಚಳಕ ಪ್ರದರ್ಶಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಗೋಲ್ಮಾಲ್ ಸಿಎಂ ಸಿದ್ದರಾಮಯ್ಯ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಅಲ್ಲದೇ, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೂಡ ಮನವಿ ಮಾಡಿದ್ದಾರೆ.
ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು? ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಈ ಆರೋಪ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಸಂಕಷ್ಟ ತರಲಿದೆಯೇ? ಅಥವಾ ಇದು ಕೇವಲ ರಾಜಕೀಯ ಆರೋಪವಷ್ಟೇನಾ ಕಾಯ್ದು ನೋಡಬೇಕಿದೆ.