ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿ ಶಿಫಾರಸು ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಅಲ್ಲದೇ, ಇದು ಆಗಸ್ಟ್ 1ರಿಂದಲೇ ಜಾರಿಗೆ ಬರಿದೆ. ಈ ಮೂಲಕ ಸರ್ಕಾರಿ ನೌಕರರ ವೇತನ ಶೇ. 10ರಷ್ಟು ಹೆಚ್ಚಳವಾಗಲಿದೆ.
7 ನೇ ವೇತನ ಆಯೋಗವು ಶೇ. 27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಹಿಂದಿನ ಸರ್ಕಾರ ಶೇ. 17 ರ ಮಧ್ಯಂತರ ಪರಿಹಾರ ನೀಡಿತ್ತು. ಈಗ ಉಳಿದ ಶೇ. 10.5 ವೇತನ ಪರಿಷ್ಕರಣೆಯಾಗಲಿದೆ. ರಾಜ್ಯದ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಲ್ಲಿ 2.50 ಲಕ್ಷ ನೌಕರರು ಹಾಗೂ 4.50 ಲಕ್ಷ ನಿವೃತ್ತ ನೌಕರರು ಸೇರಿದಂತೆ ಒಟ್ಟು 12.20 ಲಕ್ಷ ನೌಕರ ಕುಟುಂಬಗಳಿಗೆ ಇದು ಅನುಕೂಲ ಕಲ್ಪಿಸಲಿದೆ.
ವೇತನ ಮತ್ತು ಭತ್ಯೆ ಪರಿಷ್ಕರಣೆಗೆ ಸಂಪುಟ ಅಸ್ತು ನೀಡಿದ್ದು, ವೇತನ ಪರಿಷ್ಕರಣೆ ಪೂರ್ವಾನ್ವಯ ಜಾರಿಯಾಗಬೇಕು ಎಂಬ ನೌಕರರ ಬೇಡಿಕೆಗೆ ಮಾತ್ರ ಸರ್ಕಾರ ಮಾನ್ಯತೆ ನೀಡಿಲ್ಲ. ನೌಕರ ಸಮುದಾಯದ ಇನ್ನೂ ಎರಡು ಪ್ರಮುಖ ಬೇಡಿಕೆಗಳ ವಿಚಾರದಲ್ಲಿಯಾವುದೇ ನಿರ್ಧಾರ ಕೈಗೊಂಡಿಲ್ಲ. ಎನ್ ಪಿಎಸ್ ಯೋಜನೆ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಬೇಕು ಹಾಗೂ ಆರೋಗ್ಯ ಸಂಜೀವಿನಿ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸಬೇಕು ಎಂಬ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿಲ್ಲ.
ವೇತನ ಆಯೋಗದ ವರದಿಯ ಯಥಾವತ್ ಜಾರಿಗೆ ಆಗ್ರಹಿಸಿ ಈ ತಿಂಗಳ 29ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ನೌಕರ ಸಂಘಟನೆಗಳ ಪ್ರತಿನಿಧಿಗಳು ಕಳೆದ ಶುಕ್ರವಾರ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿದ್ದರು. ಈ ಮಧ್ಯೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಶಿಫಾರಸ್ಸು ಜಾರಿಯಿಂದ ವಾರ್ಷಿಕ 18,000 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ. ವಿಧಾನಸಭೆ ಚುನಾವಣೆಗೆ ಮುನ್ನ ಹಿಂದಿನ ಸರ್ಕಾರ ಒತ್ತಡದ ಹಿನ್ನೆಲೆಯಲ್ಲಿ ಆಯೋಗದ ಅಂತಿಮ ವರದಿ ನಿರೀಕ್ಷಿಸಿ ಶೇ. 17 ಮಧ್ಯಂತರ ಪರಿಹಾರ ನೀಡಿತ್ತು.