ಬೆಂಗಳೂರಿನಲ್ಲಿ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ ಸುಮಾರು 2000 ವೈದ್ಯ ವಿದ್ಯಾರ್ಥಿಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಳಸಲಾಗುವುದು ಎಂದು ಅವರು ಹೇಳಿದರು. ಅಲ್ಲದೆ ಅಂತಿಮ ಹಂತದಲ್ಲಿರುವ 2000 ನರ್ಸಿಂಗ್ ವಿದ್ಯಾರ್ಥಿಗಳು ಮತ್ತು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ನೀಡಲು ಬಳಸುವುದಾಗಿ ಸುಧಾಕರ್ ತಿಳಿಸಿದ್ದಾರೆ. ಈ ಸೇವೆಯಲ್ಲಿ ತೊಡಗುವ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯಲ್ಲಿ 5 ವಿಶೇಷಾಂಕಗಳನ್ನು ನೀಡುವ ಕುರಿತಂತೆ ಚರ್ಚೆ ನಡೆಸಲಾಗಿದ್ದು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವುದಾಗಿ ಸಚಿವರು ಹೇಳಿದ್ದಾರೆ.
ಕೊರೋನ ಯೋಧರನ್ನು ಬೆಂಬಲಿಸಬೇಕು. ಕೊರೋನ ನಿಯಂತ್ರಣಕ್ಕೆ ನಮ್ಮ ಸರ್ಕಾರ ಬದ್ಧತೆಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಮಾಧ್ಯಮದವರು ಜನರಲ್ಲಿ ಆತಂಕ ಹುಟ್ಟಿಸದೆ ಸರಿಯಾದ ಮಾಹಿತಿ ನೀಡಬೇಕು. ಸಂಘಟಿತರಾಗಿ ಅರಿವು ಮೂಡಿಸಬೇಕು. ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಬೇಕು. ಸರ್ಕಾರದ ಜೊತೆ ನಾಗರಿಕರ ಸಹಭಾಗಿತ್ವದಿಂದ ಮಾತ್ರ ಇದನ್ನು ನಿಯಂತ್ರಿಸಲು ಸಾಧ್ಯ ಎಂದು ಸಚಿವ ಸುಧಾಕರ್ ಈ ಸಂದರ್ಭದಲ್ಲಿ ಹೇಳಿದರು. ಬೂತ್ ಮಟ್ಟದ ಟಾಸ್ಕ್ ಫೋರ್ಸ್ ರಚನೆಗೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು ಶೀಘ್ರದಲ್ಲೇ ಟಾಸ್ಕ್ ಫೋರ್ಸ್ ರಚನೆಯಾಗಲಿದೆ. ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಇದು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ ಎಂದು ಸಚಿವರು ಹೇಳಿದರು.








