ಹಾವೇರಿ: ರಾಜ್ಯದಲ್ಲಿನ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ನ. 13ರಂದು ಮತದಾನ ನಡೆಯಲಿದೆ. ಹೀಗಾಗಿ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ಅಳೆದು ತೂಗುವ ಲೆಕ್ಕಾಚಾರ ಮಾಡುತ್ತಿವೆ. ಈ ಮಧ್ಯೆ ಶಿಗ್ಗಾಂವಿ ಕ್ಷೇತ್ರಕ್ಕೆ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂವರು ಅಭ್ಯರ್ಥಿಗಳಿಂದ 4 ನಾಮಪತ್ರ ಸಲ್ಲಿಕೆಯಾಗಿವೆ. ಹಿಂದೂಸ್ಥಾನ ಜನತಾ ಪಕ್ಷದ ಅಭ್ಯರ್ಥಿಯಾಗಿ ಶಿವಕುಮಾರ್ ತಳವಾರ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಸೋಷಿಯಲಿಸ್ಟ್ ಪಾರ್ಟಿ ಅಭ್ಯರ್ಥಿಯಾಗಿ ಖಾಜಾಮೋಹಿದ್ದೀನ್ ಗುಡಗೇರಿ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ರವಿ ಕೃಷ್ಣಾರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿ ಮೊಹಮ್ಮದ್ ಖಿಜರ್ ಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಶಿಗ್ಗಾಂವಿ ಬೈಎಲೆಕ್ಷನ್ ಟಿಕೆಟ್ಗೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ ನಡೆದಿದೆ. ತಮ್ಮ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ಕೊಡಿಸುವುದಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಯತ್ನಿಸುತ್ತಿದ್ದಾರೆ. ಮುರುಗೇಶ್ ನಿರಾಣಿ ಮತ್ತು ಶ್ರೀಕಾಂತ್ ದುಂಡಿಗೌಡರ ಹೆಸರು ಕೂಡ ಕೇಳಿಬರುತ್ತಿವೆ.