ಬಳ್ಳಾರಿ: ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸರ್ಕಾರಕ್ಕೆ ಆಗುತ್ತಿಲ್ಲ. ಹೀಗಾಗಿ ಅನುದಾನ ಸಿಗುತ್ತಿಲ್ಲ. ರೇಷನ್ ಕಾರ್ಡ್ ರದ್ದುಗೊಳಿಸಲಾಗುತ್ತಿದೆ. ಭ್ರಷ್ಟಾಚಾರ ಮಾಡಲಾಗುತ್ತಿದೆ ಎಂಬೆಲ್ಲ ಆರೋಪಗಳನ್ನು ವಿರೋಧ ಪಕ್ಷಗಳು ಮಾಡುತ್ತಿವೆ. ಈ ಮಧ್ಯೆ ಕೈ ಶಾಸಕರೇ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ಶಾಸಕ ಎಚ್.ಆರ್. ಗವಿಯಪ್ಪ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರವು ಸರಿಯಾಗಿ ಅನುದಾನ ನೀಡುತ್ತಿಲ್ಲ. ಹೀಗಾಗಿ ಕ್ಷೇತ್ರದ ಅಭಿವೃದ್ಧಿ ಆಗುತ್ತಿಲ್ಲ. ನೀವು ಆಯ್ಕೆಯಾಗಿ ಎರಡು ವರ್ಷಗಳಾಗಿವೆ. ಕ್ಷೇತ್ರದಲ್ಲಿ ಏನು ಮಾಡಿದ್ದೀರಿ? ಎಂದು ಜನ ಪ್ರಶ್ನಿಸುತ್ತಿದ್ದಾರೆ. ಆದರೆ ನನ್ನ ಕ್ಷೇತ್ರ ಅಭಿವೃದ್ಧಿ ಮಾಡಲು ಹಣ ಇಲ್ಲ. ನಮ್ಮದೇ ಸರ್ಕಾರ ಇದ್ದರೂ ಅನುದಾನ ಬಿಡುಗಡೆ ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಬೇರೆಯವರಿಗೆ ಹಣ ನೀಡಲಾಗುತ್ತಿದೆ. ನನ್ನ ಕ್ಷೇತ್ರಕ್ಕೆ KKRDB ಸೇರಿದಂತೆ ಯಾವ ಅನುದಾನವೂ ಸರಿಯಾಗಿ ಸಿಗುತ್ತಿಲ್ಲ. ಹೀಗಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತಿವೆ. ಈ ಹಿಂದೆ ಇದ್ದ ಬಿಜೆಪಿ ಶಾಸಕ ಆನಂದ್ ಸಿಂಗ್ (Anand Singh) ತಂದ ಅನುದಾನದಲ್ಲಿಯೇ ಒಂದೂವರೆ ವರ್ಷ ಕೆಲಸ ನಡೆದಿದೆ. ಈಗಲಾದರೂ ನಮಗೆ ಕೆಲಸ ಮಾಡಲು ಅನುದಾನ ಬೇಕಲ್ವಾ? ವಿಜಯನಗರ ಜಿಲ್ಲೆಯ ಬೇರೆ ಬೇರೆ ಕ್ಷೇತ್ರಗಳಿಗೆ 60, 70 ಕೋಟಿ ರೂ. ಅನುದಾನ ನೀಡಿದ್ದಾರೆ. ವಿಜಯನಗರ ಕ್ಷೇತ್ರಕ್ಕೆ ಕೇವಲ 22 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ 12 ಕೋಟಿ ರೂ. ಅನುದಾನ ನೀಡಿದ್ದೇನೆ. ಉಳಿದ 8 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರದಲ್ಲಿ ಏನು ಕೆಲಸ ಮಾಡಲಿ ಎಂದು ಪ್ರಶ್ನಿಸಿದ್ದಾರೆ.








