ಬೆಂಗಳೂರು, ಸೆ.18: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ (Bengaluru Potholes) ಉದ್ಯಮಿಗಳು, ಖಾಸಗಿ ಕಂಪನಿಗಳ ನೌಕರರು ರೋಸಿ ಹೋಗಿದ್ದಾರೆ. ಐಟಿ ದಿಗ್ಗಜ್ಜರು ನಾವು ಬೆಂಗಳೂರನ್ನೇ ಬಿಟ್ಟೋಗ್ತಿವಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಸಾಮಾಜಿಕ ಮಾಧ್ಯ,ಮ ಎಕ್ಸ್ನಲ್ಲಿ ಪೋಸ್ಟ್ ಹಾಕಿದ ಅವರು, “ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರೂ ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ?” ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಗುಂಡಿ ‘ಗಂಡಾಗುಂಡಿ’: ಬೆಂಗಳೂರಿನಿಂದ ಕಂಪನಿಗಳೇ ಶಿಫ್ಟ್?
“ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ” ಎಂದರು.
ಟ್ವಿಟರ್ ಪೋಸ್ಟ್
ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ.…
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 18, 2025
“ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ!” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು.”
“ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ” ಎಂದು ಟೀಕಿಸಿದರು.
ಕಂಪನಿಗಳಿಗೆ ನನ್ನ ಮನವಿ ಇಷ್ಟೇ;
“ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ” ಎಂದು ಮನವಿ ಮಾಡಿಕೊಂಡರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








