ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (ಡಿಕೆಶಿ) ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ ಡಿಕೆಶಿಯ ಈ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯವಾಗಿ, ಇಂದು ರಾಜ್ಯ ಬಜೆಟ್ಗೆ ಸಂಬಂಧಿಸಿದ ಪೂರ್ವಭಾವಿ ಸಭೆ ನಿಗದಿಯಾಗಿದ್ದರೂ, ಆ ಸಭೆಯನ್ನು ಬಿಟ್ಟು ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದರಿಂದಾಗಿ ಸಿಎಂ ಬದಲಾವಣೆ, ಹೈಕಮಾಂಡ್ ಚರ್ಚೆ ಸೇರಿದಂತೆ ವಿವಿಧ ರಾಜಕೀಯ ಊಹಾಪೋಹಗಳಿಗೆ ಇನ್ನಷ್ಟು ಬಲ ಸಿಕ್ಕಂತಾಗಿದೆ.
ಆದರೆ ಲಭ್ಯವಾಗಿರುವ ಮಾಹಿತಿಯಂತೆ, ಈ ದೆಹಲಿ ಪ್ರವಾಸಕ್ಕೆ ರಾಷ್ಟ್ರೀಯ ರಾಜಕೀಯ ಕಾರಣವೇ ಪ್ರಮುಖವಾಗಿದೆ. ಅಸ್ಸಾಂ ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಪ್ರಮುಖ ನಾಯಕರ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.
ಡಿಕೆಶಿ ಅವರು ಕಾಂಗ್ರೆಸ್ ಸಂಘಟನಾ ವಿಚಾರಗಳಲ್ಲಿ ಪ್ರಮುಖ ಪಾತ್ರ ವಹಿಸಿರುವ ಹಿನ್ನೆಲೆ, ಚುನಾವಣಾ ತಂತ್ರ ರೂಪಿಸುವ ಸಲಹೆಗಾಗಿ ಅವರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ರಾಜ್ಯ ರಾಜಕೀಯದ ಸಂವೇದನಾಶೀಲ ಸಂದರ್ಭದಲ್ಲೇ ಈ ದೆಹಲಿ ಭೇಟಿ ನಡೆಯುತ್ತಿರುವುದರಿಂದ, ರಾಜಕೀಯ ವಲಯದಲ್ಲಿ ಕುತೂಹಲ ಮತ್ತು ಚರ್ಚೆಗಳು ಮತ್ತಷ್ಟು ಹೆಚ್ಚಾಗಿವೆ.








