ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಾವಧಿಯ ಸಾವಿರ ದಿನಗಳ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಈ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನತೆ ಸಂಕಷ್ಟದಲ್ಲಿರುವಾಗ ಸರಕಾರ ಸಂಭ್ರಮ ಪಡುತ್ತಿರುವುದು ವಿಕೃತ ಮನಸ್ಥಿತಿಯ ಪರಮಾವಧಿ ಎಂದು ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.
ಶನಿವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ಒಂದು ಸಾವಿರ ದಿನಗಳಲ್ಲಿ ರಾಜ್ಯಕ್ಕೆ ಕೀರ್ತಿ ತರುವಂತಹ ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಬದಲಾಗಿ ಸಾವಿರಾರು ಸಮಸ್ಯೆಗಳನ್ನು ಸೃಷ್ಟಿಸಿದೆ ಎಂದು ಆರೋಪಿಸಿದರು.
ಭ್ರಷ್ಟಾಚಾರದ ಸಂಭ್ರಮವೇ?
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡು ಆಡಳಿತ ವ್ಯವಸ್ಥೆಯೇ ನೆಲಕಚ್ಚಿದೆ. ಇಂತಹ ಸಂದರ್ಭದಲ್ಲಿ ನೀವು ಯಾವುದಕ್ಕಾಗಿ ಸಂಭ್ರಮಾಚರಣೆ ಮಾಡುತ್ತಿದ್ದೀರಿ? ರಾಜ್ಯದಲ್ಲಿ ಎಗ್ಗಿಲ್ಲದೆ ಭ್ರಷ್ಟಾಚಾರ ನಡೆಸಿದ್ದಕ್ಕಾಗಿಯೇ ಈ ಸಂಭ್ರಮವೇ ಎಂದು ರವಿ ಅವರು ನೇರ ಪ್ರಶ್ನೆ ಮಾಡಿದರು. ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ನಂತರ ರಾಜ್ಯದ ಸಾಲದ ಹೊರೆ ವಿಪರೀತವಾಗಿ ಏರಿಕೆಯಾಗಿದೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿದ್ದಾರೆ. ಜನತೆ ಸಂಕಟಪಡುತ್ತಿರುವಾಗ ನೀವು ಸಂಭ್ರಮಿಸುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.
ಹಗರಣಗಳ ಸರಮಾಲೆ
ಕಳೆದ ಒಂದು ಸಾವಿರ ದಿನಗಳ ಆಡಳಿತಾವಧಿಯನ್ನು ಪರಾಮರ್ಶಿಸಿದರೆ ಕೇವಲ ವೈಫಲ್ಯಗಳೇ ಎದ್ದು ಕಾಣುತ್ತಿವೆ ಎಂದು ಸಿ.ಟಿ. ರವಿ ಕಿಡಿಕಾರಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಚಿವರು ಮತ್ತು ಶಾಸಕರುಗಳ ಬಂಧನ, ಗುತ್ತಿಗೆದಾರರ ಬಿಲ್ ಬಾಕಿ ಉಳಿಸಿಕೊಂಡಿರುವುದು, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ ಹಣದ ಅಕ್ರಮ ವರ್ಗಾವಣೆ, ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ಹಾಗೂ ಅಬಕಾರಿ ಲೈಸೆನ್ಸ್ ಹಗರಣಗಳು ಸರಕಾರದ ಸಾಧನೆಗಳಾಗಿವೆ ಎಂದು ವ್ಯಂಗ್ಯವಾಡಿದರು.
ಇದರೊಂದಿಗೆ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿವೆ, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ಏರಿಕೆಯಾಗಿವೆ. ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗವಾಗಿದೆ. ಇವೆಲ್ಲವನ್ನೂ ಮಾಡಿದ್ದೇವೆ ಎಂದು ಸಂಭ್ರಮ ಪಡುತ್ತಿದ್ದೀರಾ? ಒಂದಾದರೂ ಜನಪರವಾದ, ಸಂಭ್ರಮಪಡುವಂತಹ ಕೆಲಸವನ್ನು ಹೇಳಿ ಎಂದು ಸವಾಲು ಹಾಕಿದರು.
ಸಿಎಂ ಕುರ್ಚಿ ಗೊಂದಲ ಬಗೆಹರಿಸಿ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿ ಆಶೀರ್ವದಿಸಿದ್ದಾರೆ. ಆದರೆ, ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿ ಯಾರು ಎನ್ನುವ ಗೊಂದಲವೇ ಹೆಚ್ಚಾಗಿದೆ. ಇದು ಕಾಂಗ್ರೆಸ್ ಪಕ್ಷದ ಆಂತರಿಕ ಸಮಸ್ಯೆಯೇ ಹೊರತು ರಾಜ್ಯದ ಜನರ ಸಮಸ್ಯೆಯಲ್ಲ. ಮುಂಬರುವ ಬಜೆಟ್ ಮಂಡನೆಗಿಂತ ಮೊದಲಾದರೂ ಸಿಎಂ ಕುರ್ಚಿ ಮೇಲಿನ ಗೊಂದಲವನ್ನು ಬಗೆಹರಿಸಿ, ಹಳಿ ತಪ್ಪಿರುವ ಆಡಳಿತವನ್ನು ಸರಿದಾರಿಗೆ ತನ್ನಿ ಎಂದು ಅವರು ಸಲಹೆ ನೀಡಿದರು.
ಬಿಜೆಪಿ ಮೇಲಿನ ಆರೋಪಕ್ಕೆ ತಿರುಗೇಟು
ಬಿಜೆಪಿ ಆಡಳಿತವಿದ್ದಾಗಲೂ ಭ್ರಷ್ಟಾಚಾರದ ಆರೋಪಗಳಿದ್ದವು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರಕಾರದ ಅವಧಿಯಲ್ಲಿ ಭ್ರಷ್ಟಾಚಾರ ಸಾಬೀತಾಗಿಲ್ಲ. ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಮೇಲಿನ ಆರೋಪಗಳು ಕೇವಲ ರಾಜಕೀಯ ಪ್ರೇರಿತವಾಗಿದ್ದು, ಅದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಪ್ರಮುಖರಾದ ವಿಕಾಸ್ ಪುತ್ತೂರು ಹಾಗೂ ವಸಂತ ಪೂಜಾರಿ ಉಪಸ್ಥಿತರಿದ್ದರು.







