ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಹಾಗೂ ರಾಜ್ಯದಲ್ಲಿ ನಡೆಯಲಿರುವ ಎರಡು ಕ್ಷೇತ್ರಗಳ ಉಪಚುನಾವಣೆಯತ್ತ ನಾಯಕರು ತಮ್ಮ ಚಿತ್ತ ಹರಿಸಿದ್ದಾರೆ. ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ವಹಿಸಿರುವ ಮಹತ್ವದ ಜವಾಬ್ದಾರಿಗಳನ್ನು ಹೆಗಲಿಗೇರಿಸಿಕೊಂಡು ಪ್ರಮುಖ ನಾಯಕರು ತಮ್ಮ ತಮ್ಮ ಕಾರ್ಯಕ್ಷೇತ್ರಗಳತ್ತ ದೌಡಾಯಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಅಂತರ ಕಾಯ್ದುಕೊಂಡ ಸಚಿವ ಜಮೀರ್ ಅಹ್ಮದ್
ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ಆರಂಭಿಸಿದೆ. ಆದರೆ ಈ ಪ್ರಚಾರ ಕಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಗೈರುಹಾಜರಿ ಎದ್ದು ಕಾಣುತ್ತಿದೆ. ಕಳೆದ ಎರಡು ದಿನಗಳಿಂದ ನೆರೆಯ ಕೇರಳ ರಾಜ್ಯದಲ್ಲಿ ಬೀಡುಬಿಟ್ಟಿರುವ ಜಮೀರ್ ಅವರು ದಾವಣಗೆರೆಯತ್ತ ಸುಳಿಯದಿರುವುದು ಕಾಂಗ್ರೆಸ್ ಪಾಳಯದಲ್ಲಿ ಹೊಸ ಆತಂಕವನ್ನು ಹುಟ್ಟುಹಾಕಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬರೋಬ್ಬರಿ ಎಂಭತ್ತು ಸಾವಿರಕ್ಕೂ ಅಧಿಕ ಅಲ್ಪಸಂಖ್ಯಾತ ಮತಗಳಿವೆ. ಈ ನಿರ್ಣಾಯಕ ಮತಗಳ ಆಧಾರದ ಮೇಲೆ, ಈ ಬಾರಿಯ ಟಿಕೆಟ್ ಅನ್ನು ತಮ್ಮ ಸಮುದಾಯದ ಅಲ್ಪಸಂಖ್ಯಾತ ನಾಯಕರಿಗೆ ನೀಡಲೇಬೇಕು ಎಂದು ಜಮೀರ್ ಅಹ್ಮದ್ ಹೈಕಮಾಂಡ್ ಮುಂದೆ ತೀವ್ರ ಪಟ್ಟು ಹಿಡಿದಿದ್ದರು. ಆದರೆ ಅವರ ಬೇಡಿಕೆಯನ್ನು ನಿರಾಕರಿಸಿ ಟಿಕೆಟ್ ಕೈತಪ್ಪಿದ ಕಾರಣ ತೀವ್ರ ಅಸಮಾಧಾನಗೊಂಡಿರುವ ಜಮೀರ್ ದಾವಣಗೆರೆಯ ಕಡೆಗೆ ಮುಖ ಮಾಡಿಲ್ಲ. ಆದಾಗ್ಯೂ, ಚುನಾವಣಾ ಪ್ರಚಾರಕ್ಕೆ ಇನ್ನೂ ಸಾಕಷ್ಟು ದಿನಗಳ ಕಾಲಾವಕಾಶ ಇರುವುದರಿಂದ ಮುಂದಿನ ದಿನಗಳಲ್ಲಿ ಅವರ ಕೋಪ ತಣ್ಣಗಾಗಿ ಪಕ್ಷದ ಅಭ್ಯರ್ಥಿ ಪರ ಮತಯಾಚನೆಗೆ ಬರಬಹುದು ಎಂಬ ದಟ್ಟ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ.
ದಾವಣಗೆರೆಯಲ್ಲಿ ಇತರ ನಾಯಕರ ಬಿರುಸಿನ ಪ್ರಚಾರ
ಜಮೀರ್ ಅಹ್ಮದ್ ಗೈರಿನ ನಡುವೆಯೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಚಾರದ ಅಬ್ಬರ ಜೋರಾಗಿಯೇ ಇದೆ. ಸಚಿವರಾದ ಬೈರತಿ ಸುರೇಶ್ ಹಾಗೂ ಎಸ್ ಎಸ್ ಮಲ್ಲಿಕಾರ್ಜುನ್ ಅವರುಗಳು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಯುವ ಶಾಸಕರು ಹಾಗೂ ಹಿರಿಯ ನಾಯಕರು ಸಾಥ್ ನೀಡಿದ್ದಾರೆ. ಪ್ರಮುಖವಾಗಿ ಶಾಸಕ ಪ್ರದೀಪ್ ಈಶ್ವರ್, ಜಿ ಎಸ್ ಶ್ರೀನಿವಾಸ, ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಪರವಾಗಿ ಅಬ್ಬರದ ಮತಯಾಚನೆ ಮಾಡುತ್ತಿದ್ದಾರೆ.
ಕೇರಳದಲ್ಲಿ ಜಮೀರ್ ಹಾಗೂ ಈಶ್ವರ್ ಖಂಡ್ರೆ ಪ್ರಚಾರದ ಅಬ್ಬರ
ರಾಜ್ಯದಲ್ಲಿ ಅಸಮಾಧಾನಗೊಂಡಿರುವ ಸಚಿವ ಜಮೀರ್ ಅಹ್ಮದ್ ಅವರು ಕೇರಳ ರಾಜ್ಯದಲ್ಲಿ ಬಿಡುವಿಲ್ಲದ ಪ್ರಚಾರದಲ್ಲಿ ನಿರತರಾಗಿದ್ದಾರೆ. ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಬೇಟೆ ಮಾಡುತ್ತಿರುವ ಅವರು, ಅಲ್ಲಿನ ಪ್ರಮುಖ ಮುಸ್ಲಿಂ ಧರ್ಮಗುರುಗಳನ್ನು ಭೇಟಿಯಾಗಿ ಸಭೆಗಳನ್ನು ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಒಲವು ಗಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇವರ ಜೊತೆಗೆ ಸಚಿವ ಈಶ್ವರ್ ಖಂಡ್ರೆ ಅವರು ಕೂಡ ಕೇರಳವನ್ನು ತಲುಪಿದ್ದು, ಅಳಪ್ಪುಳ ಜಿಲ್ಲೆಯ ವಿವಿಧೆಡೆ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಅಸ್ಸಾಂನಲ್ಲಿ ಭಾರೀ ಬದಲಾವಣೆ ಖಚಿತ, ಡಿಸಿಎಂ ಡಿಕೆ ಶಿವಕುಮಾರ್ ಭವಿಷ್ಯ
ಇತ್ತ ಅಸ್ಸಾಂ ವಿಧಾನಸಭಾ ಚುನಾವಣೆಯ ವೀಕ್ಷಕರಾಗಿ ನೇಮಕಗೊಂಡಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ ಬೆಂಗಳೂರಿನಿಂದ ಅಸ್ಸಾಂನತ್ತ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಸ್ಸಾಂನಲ್ಲಿ ಈ ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸುವ ವಿಶ್ವಾಸ ವ್ಯಕ್ತಪಡಿಸಿದರು.
ನಾನು ಅಸ್ಸಾಂ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದು, ಬಳಿಕ ಕೇರಳಕ್ಕೂ ಹೋಗಬೇಕಿದೆ. ಜೊತೆಗೆ ಕರ್ನಾಟಕದ ಉಪಚುನಾವಣೆಗಳ ಸಂಪೂರ್ಣ ಜವಾಬ್ದಾರಿಯನ್ನೂ ನಿಭಾಯಿಸಬೇಕಿದೆ. ಅಸ್ಸಾಂ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಭ್ರಷ್ಟಾಚಾರ ಮಿತಿಮೀರಿದ್ದು ಸಾಮಾನ್ಯ ಜನರು ತೀವ್ರವಾಗಿ ನರಳುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ನೀಡಿದ್ದ ಯಾವುದೇ ಭರವಸೆಗಳು ಈಡೇರಿಲ್ಲ. ಕಳೆದ ಹತ್ತು ವರ್ಷಗಳಲ್ಲಿ ಜನರ ಪ್ರಗತಿ ಶೂನ್ಯವಾಗಿದೆ. ಈ ಕಾರಣಕ್ಕಾಗಿ ಅಲ್ಲಿನ ಜನರು ಭಾರೀ ಬದಲಾವಣೆಯನ್ನು ಬಯಸಿದ್ದಾರೆ ಎಂದು ಡಿ ಕೆ ಶಿವಕುಮಾರ್ ಭವಿಷ್ಯ ನುಡಿದರು.
ಇತ್ತೀಚೆಗೆ ನಡೆದ ಸಚಿವ ಸಂಪುಟ ಪುನಾರಚನೆಯ ಬಳಿಕ ಅಸ್ಸಾಂ ಬಿಜೆಪಿಯಲ್ಲಿ ಆಂತರಿಕ ಕಲಹ ಭುಗಿಲೆದ್ದಿದೆ. ಸ್ವತಃ ಬಿಜೆಪಿ ನಾಯಕರೇ ತಮ್ಮ ಪಕ್ಷದಲ್ಲಿ ತಮಗೆ ಸೂಕ್ತ ಅವಕಾಶಗಳಿಲ್ಲ ಎಂದು ತೀವ್ರ ಬೇಸರಗೊಂಡಿದ್ದಾರೆ. ಅವರ ಪಕ್ಷದಲ್ಲಿ ಯಾರೊಬ್ಬರೂ ಸಂತೋಷವಾಗಿಲ್ಲ, ಇದು ನಮಗೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಅವರು ವಿಶ್ಲೇಷಿಸಿದರು. ಒಟ್ಟಾರೆಯಾಗಿ ಕಾಂಗ್ರೆಸ್ ನಾಯಕರು ಅತ್ತ ಹೊರರಾಜ್ಯಗಳಲ್ಲೂ, ಇತ್ತ ತವರು ರಾಜ್ಯದಲ್ಲೂ ಚುನಾವಣಾ ಗೆಲುವಿಗಾಗಿ ರಣತಂತ್ರ ಹೆಣೆಯುತ್ತಿದ್ದಾರೆ.








