ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ ಇದೀಗ ಆಡಳಿತಾರೂಢ ಕಾಂಗ್ರೆಸ್ ನಾಯಕರ ಆಂತರಿಕ ಅಸಮಾಧಾನಕ್ಕೂ ಸ್ಫೋಟಕ ವೇದಿಕೆಯಾಗಿದ್ದು, ಸ್ವಪಕ್ಷೀಯ ಸಚಿವರ ವಿರುದ್ಧವೇ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ ಎಚ್ ಮುನಿಯಪ್ಪ ಅವರು ಕೇಂದ್ರ ಸರ್ಕಾರವನ್ನು ಓಲೈಸುತ್ತಿದ್ದಾರೆ ಎಂದು ಆರೋಪಿಸಿರುವ ಲಕ್ಷ್ಮಣ್, ಸತ್ಯ ಹೇಳಲು ಸಾಧ್ಯವಾಗದಿದ್ದರೆ ಬಾಯಿ ಮುಚ್ಚಿಕೊಂಡು ಸುಮ್ಮನಿರಿ ಎಂದು ಹಿರಿಯ ಸಚಿವರಿಗೆ ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ.
ಪಶ್ಚಿಮ ಏಷ್ಯಾ ಯುದ್ಧದ ಬಿಸಿ, ರಾಜ್ಯದಲ್ಲಿ ಗ್ಯಾಸ್ ಹಾಹಾಕಾರ
ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ನೇರ ಪರಿಣಾಮ ತೈಲ ಆಮದಿನ ಮೇಲೆ ಬಿದ್ದಿದೆ. ಇದರ ಬಿಸಿ ಇದೀಗ ಕರ್ನಾಟಕದ ಜನತೆಗೆ ತಟ್ಟಿದ್ದು, ರಾಜ್ಯಾದ್ಯಂತ ಗ್ಯಾಸ್ ಸಿಲಿಂಡರ್ ಮತ್ತು ಆಟೋ ಗ್ಯಾಸ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಗ್ಯಾಸ್ ಸಿಗದೆ ಆಟೋ ಚಾಲಕರು ಬೀದಿಗೆ ಬಿದ್ದಿದ್ದಾರೆ. ತಮ್ಮ ಆಟೋಗಳಿಗೆ ಗ್ಯಾಸ್ ತುಂಬಿಸಿಕೊಳ್ಳಲು ಚಾಲಕರು ರಾತ್ರಿ ಇಡೀ ಗ್ಯಾಸ್ ಬಂಕ್ ಗಳಲ್ಲೇ ಮಲಗಿ ಕಾಯುವಂತಹ ಶೋಚನಿಯ ಪರಿಸ್ಥಿತಿ ನಿರ್ಮಾಣವಾಗಿದೆ. ದಿನದ ದುಡಿಮೆಯನ್ನೇ ನಂಬಿಕೊಂಡಿರುವ ಚಾಲಕರು ಪರದಾಡುತ್ತಿದ್ದಾರೆ.
ಕೇಂದ್ರದ ವೈಫಲ್ಯ ಮುಚ್ಚಿಡುತ್ತಿರುವ ಸಚಿವ ಮುನಿಯಪ್ಪ
ರಾಜ್ಯದಲ್ಲಿನ ಈ ಭಾರಿ ಅಭಾವಕ್ಕೆ ನೇರವಾಗಿ ಕೇಂದ್ರ ಸರ್ಕಾರವೇ ಕಾರಣ, ಬೇಡಿಕೆಗೆ ತಕ್ಕಂತೆ ಕೇಂದ್ರದಿಂದ ಗ್ಯಾಸ್ ಪೂರೈಕೆಯಾಗುತ್ತಿಲ್ಲ ಎಂದು ಲಕ್ಷ್ಮಣ್ ಕಿಡಿಕಾರಿದ್ದಾರೆ. ಆದರೆ ಈ ಸತ್ಯವನ್ನು ಜನಸಾಮಾನ್ಯರಿಗೆ ತಿಳಿಸುವಲ್ಲಿ ಆಹಾರ ಸಚಿವ ಕೆ ಎಚ್ ಮುನಿಯಪ್ಪ ಸಂಪೂರ್ಣ ವಿಫಲರಾಗಿದ್ದಾರೆ. ಕೇಂದ್ರದ ಲೋಪವನ್ನು ಎತ್ತಿ ತೋರಿಸುವ ಬದಲು, ಸಚಿವರು ಪದೇ ಪದೇ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ಇಮೇಜ್ ಡ್ಯಾಮೇಜ್
ಮುನಿಯಪ್ಪ ಅವರ ಈ ನಡೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಲಕ್ಷ್ಮಣ್ ಆತಂಕ ವ್ಯಕ್ತಪಡಿಸಿದ್ದಾರೆ. ಸಚಿವರು ಪದೇ ಪದೇ ಸಭೆಗಳನ್ನು ಮಾಡುತ್ತಿರುವುದನ್ನು ನೋಡಿದರೆ, ಜನಸಾಮಾನ್ಯರು ಗ್ಯಾಸ್ ಪೂರೈಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದು ಎಂದು ಭಾವಿಸುತ್ತಾರೆ. ಕೇಂದ್ರ ಸರ್ಕಾರ ಮಾಡಿರುವ ತಪ್ಪಿಗೆ ರಾಜ್ಯ ಸರ್ಕಾರದ ಮೇಲೆ ಜನರಿಗೆ ಆಕ್ರೋಶ ಮತ್ತು ವ್ಯತಿರಿಕ್ತ ಭಾವನೆ ಮೂಡಲು ಸಚಿವರ ಈ ನಡೆ ಕಾರಣವಾಗುತ್ತಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.
ಹಿರಿಯ ಸಚಿವರಿಗೆ ಲಕ್ಷ್ಮಣ್ ಖಡಕ್ ತರಾಟೆ
ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಮತ್ತು ಅಪಾರ ರಾಜಕೀಯ ಅನುಭವ ಹೊಂದಿರುವ ಕೆ ಎಚ್ ಮುನಿಯಪ್ಪ ಅವರಂತಹ ಹಿರಿಯ ನಾಯಕರು ಹೀಗೆ ವರ್ತಿಸುತ್ತಿರುವುದು ಬೇಸರದ ಸಂಗತಿ. ಕೇಂದ್ರ ಸರ್ಕಾರದ ವೈಫಲ್ಯವನ್ನು ಪ್ರಶ್ನಿಸುವ ಬದಲು ಅವರನ್ನು ಓಲೈಸುವ ಕೆಲಸ ಮಾಡುತ್ತಿದ್ದೀರಾ. ಪದೇ ಪದೇ ಸಭೆಗಳನ್ನು ಮಾಡಿ ನಾಟಕ ಆಡುವುದನ್ನು ಬಿಟ್ಟು, ಸುಮ್ಮನೆ ಬಾಯಿ ಮುಚ್ಚಿಕೊಂಡು ಇದ್ದರೆ ಬಹಳ ಚಂದ ಎಂದು ಲಕ್ಷ್ಮಣ್ ತಮ್ಮದೇ ಪಕ್ಷದ ಸಚಿವರ ವಿರುದ್ಧ ಹರಿಹಾಯ್ದಿದ್ದಾರೆ.
ಒಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಯುದ್ಧದಿಂದ ಶುರುವಾದ ಗ್ಯಾಸ್ ಅಭಾವದ ಸಮಸ್ಯೆ, ಇದೀಗ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರ ನಡುವಿನ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಈ ಒಳಜಗಳ ಯಾವ ಸ್ವರೂಪ ಪಡೆದುಕೊಳ್ಳಲಿದೆ ಕಾದು ನೋಡಬೇಕಿದೆ.








