ಅವಕಾಶಗಳಿದ್ದರೂ ರಾಜ್ಯದ ಅಭಿವೃದ್ಧಿಗೆ ಗಮನಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಧ್ಯವಾಗಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ತೀವ್ರ ಟೀಕೆ ಮಾಡಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಗಳು ಸಿಎಂ ಸಿದ್ದರಾಮಯ್ಯ ಅವರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಇದು ಅವರ ನಿದ್ದೆಗೆಡಿಸಿದೆ ಎಂದು ಆರೋಪಿಸಿದರು.
ಸರ್ಕಾರವು ಅಭಿವೃದ್ಧಿ ಕಾರ್ಯಗಳಿಗಿಂತಲೂ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಜನರ ಗಮನ ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿದೆ. ಬರೀ ಗ್ಯಾರಂಟಿಗಳನ್ನೇ ಆಧಾರ ಮಾಡಿಕೊಂಡು ಚುನಾವಣೆಗೆ ಬರಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಮುಖವಾಡ ಹಾಕಿಕೊಂಡಿದ್ದಾರೆ ಎಂದು ಅವರು ಲೇವಡಿ ಮಾಡಿದ್ದಾರೆ.
ಇದೇ ವೇಳೆ, ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾರ್ಯಕರ್ತರು ಕೊನೆಯ ಕ್ಷಣದವರೆಗೂ ಜಾಗರೂಕರಾಗಿ ಕೆಲಸ ಮಾಡುವಂತೆ ಕರೆ ನೀಡಿದರು.







