ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಚೋದನಾಕಾರಿ ಹೇಳಿಕೆಗಳ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಿ, ನಾಲಿಗೆಯನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವಂತೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಖರ್ಗೆಯವರಿಗೆ ಎಚ್ಚರಿಕೆ ನೀಡಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು ಅರಳು-ಮರಳು ಮಾತುಗಳಂತಿವೆ. ಅವರ ಮಾನಸಿಕ ಆರೋಗ್ಯ ಸರಿ ಇಲ್ಲವೇನೋ ಎಂಬ ಅನುಮಾನ ಮೂಡುತ್ತಿದೆ ಎಂದು ಹರಿಹಾಯ್ದರು. ಬಿಜೆಪಿ ಮತ್ತು ಆರ್ಎಸ್ಎಸ್ ಕುರಿತು ಪ್ರಚೋದನಾಕಾರಿ ಹೇಳಿಕೆ ನೀಡಿ, ಜನರನ್ನು ಕೊಲ್ಲಲು ಪ್ರಚೋದನೆ ನೀಡುವ ಕೆಲಸ ಮಾಡುತ್ತಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆಯನ್ನು ದೇಶವೇ ಖಂಡಿಸುತ್ತಿದೆ ಎಂದು ಕಿಡಿಕಾರಿದರು.
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಯ ಅನ್ವಯ, ಖರ್ಗೆಯವರ ಇಂತಹ ವಿಷಕಾರಿ ಭಾಷಣಗಳಿಗೆ ಪ್ರಕರಣ ದಾಖಲಿಸಲು ಅವಕಾಶವಿದೆ. ಈಗಾಗಲೇ ಈ ಸಂಬಂಧ ಬಿಜೆಪಿ ದೂರು ನೀಡಿದ್ದು, ಖರ್ಗೆಯವರ ಹೇಳಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು.
ಖರ್ಗೆಯವರ ಕುಟುಂಬದ ಮೇಲೆ ರಜಾಕರು ದಾಳಿ ಮಾಡಿದ್ದರು ಎಂಬುದನ್ನು ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ. ತಮ್ಮ ಮನೆತನವನ್ನು ನಾಶ ಮಾಡಿದವರ ವಿರುದ್ಧ ಮಾತನಾಡಬೇಕಾದ ಖರ್ಗೆ, ಇಂದು ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಹಗೆತನ ಕಾರುತ್ತಿದ್ದಾರೆ. ಅಪ್ಪನಿಗೆ ಸಾಥ್ ನೀಡುತ್ತಿರುವ ಪ್ರಿಯಾಂಕ್ ಖರ್ಗೆ ಅವರದು ಕೂಡ ಅದೇ ಮನಸ್ಥಿತಿ. ಬೇವಿನ ಕಾಯಿಗೆ ಹಾಗಲಕಾಯಿ ಸಾಕ್ಷಿ ಎಂಬಂತೆ ಅಪ್ಪ-ಮಗ ಇಬ್ಬರೂ ವಿಷಕಾರಿ ಮಾತುಗಳನ್ನೇ ಆಡುತ್ತಿದ್ದಾರೆ ಎಂದು ಟೀಕಿಸಿದರು.
ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ಅವರ ವರ್ತನೆಯನ್ನು ಸ್ವತಃ ಕಾಂಗ್ರೆಸ್ ನಾಯಕರು ಕೂಡ ಇಷ್ಟಪಡುತ್ತಿಲ್ಲ. ಇಬ್ಬರೂ ಪಕ್ಷದಲ್ಲಿ ಮೂಲೆಗುಂಪಾಗಿದ್ದು, ತಮ್ಮ ಅಸ್ತಿತ್ವವನ್ನು ತೋರಿಸಿಕೊಳ್ಳಲು ಇಂತಹ ಅಗ್ಗದ ರಾಜಕೀಯ ಮಾಡುತ್ತಿದ್ದಾರೆ. ಅಪ್ಪ ಮತ್ತು ಮಗನ ತಲೆಯಲ್ಲಿ ವಿಷಕಾರಿ ಹಾವಿಗಿಂತ ಹೆಚ್ಚು ವಿಷ ತುಂಬಿಕೊಂಡಿದೆ ಎಂದು ಹರಿಹಾಯ್ದರು.
ಖರ್ಗೆಯವರಿಗೆ ತಕ್ಷಣವೇ ಕೇಂದ್ರ ಸರ್ಕಾರ ಸ್ವಯಂಪ್ರೇರಿತ ದೂರು ದಾಖಲಿಸಿ ತಿಹಾರ್ ಜೈಲಿಗೆ ಕಳಿಸಬೇಕು. ಆಗಲಾದರೂ ಅವರಿಗೆ ವಿಶ್ರಾಂತಿ ಸಿಗುತ್ತದೆ. ಮಗ ಪ್ರಿಯಾಂಕ್ ಕೂಡ ಜೊತೆಯಲ್ಲಿದ್ದರೆ ಅವರಿಗೆ ಸಹಾಯವಾಗುತ್ತದೆ. ಮಾತೆತ್ತಿದರೆ ತಾನು ದಲಿತ ಎಂದು ಹೇಳಿಕೊಳ್ಳುವ ಖರ್ಗೆ, ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾದ ಮೇಲೆ ಜಾತಿ ತಾರತಮ್ಯ ಬಿಟ್ಟು ಮಾತನಾಡಬೇಕು. ದಲಿತ ಎಂಬ ಕಾರ್ಡ್ ಬಳಸಿಕೊಂಡು ಏನು ಬೇಕಾದರೂ ಮಾತನಾಡಬಹುದು ಎಂದುಕೊಂಡರೆ ಅದು ತಪ್ಪು. ಕಾಂಗ್ರೆಸ್ ಪಕ್ಷಕ್ಕೆ ಖರ್ಗೆಯವರಿಂದ ಬಾಗಿಲು ಹಾಕಿಸುವ ಕೆಲಸ ಮಾಡಬೇಡಿ ಎಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಛಲವಾದಿ ನಾರಾಯಣಸ್ವಾಮಿ ಈ ವೇಳೆ ಸಲಹೆ ನೀಡಿದರು.







