ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಆಡಳಿತದ ಚುಕ್ಕಾಣಿ ಹಿಡಿದ ಕೆಲವೇ ದಿನಗಳಲ್ಲಿ ರಾಜ್ಯದ ಚಿತ್ರಣವನ್ನು ಬದಲಿಸಲು ಮುಂದಾಗಿದೆ. ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರವು ಅತ್ಯಂತ ಕಠಿಣ ನಿರ್ಧಾರಗಳನ್ನು ಪ್ರಕಟಿಸಿದ್ದು, ಇಡೀ ದೇಶದ ಗಮನ ಸೆಳೆದಿದೆ.
ರಸ್ತೆಗಳಲ್ಲಿ ನಮಾಜ್ ಇನ್ನು ಇತಿಹಾಸ
ಸಾರ್ವಜನಿಕರ ಸಂಚಾರಕ್ಕೆ ಮತ್ತು ವಾಹನ ದಟ್ಟಣೆಗೆ ಅಡ್ಡಿಯಾಗುತ್ತಿದ್ದ ರಸ್ತೆ ಬದಿಯ ನಮಾಜ್ ಪದ್ಧತಿಗೆ ಸರ್ಕಾರ ಸಂಪೂರ್ಣ ತಡೆ ನೀಡಿದೆ. ಪ್ರಾರ್ಥನೆಗೆ ಮಸೀದಿಗಳನ್ನು ಬಳಸಿಕೊಳ್ಳುವಂತೆ ಸೂಚಿಸಿರುವ ಸರ್ಕಾರ, ಯಾವುದೇ ಧಾರ್ಮಿಕ ಚಟುವಟಿಕೆಗಳು ಸಾರ್ವಜನಿಕರ ಹಕ್ಕುಗಳನ್ನು ಕಸಿಯಬಾರದು ಎಂಬ ದೃಢ ನಿಲುವನ್ನು ತಳೆದಿದೆ. ಐತಿಹಾಸಿಕ ರೆಡ್ ರೋಡ್ ನಲ್ಲಿ ವರ್ಷಗಳಿಂದ ನಡೆಯುತ್ತಿದ್ದ ಬೃಹತ್ ಈದ್ ಪ್ರಾರ್ಥನೆಗಳಿಗೂ ಈ ನಿಯಮ ಅನ್ವಯಿಸಲಿದ್ದು, ಕಾನೂನು ಎಲ್ಲರಿಗೂ ಒಂದೇ ಎಂಬ ಕಟ್ಟುನಿಟ್ಟಿನ ಸಂದೇಶವನ್ನು ರವಾನಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಅರ್ಜುನ್ ಸಿಂಗ್, ಧಾರ್ಮಿಕ ಸ್ವಾತಂತ್ರ್ಯಕ್ಕೆ ಮನ್ನಣೆ ಇದೆ ಆದರೆ ಸಾರ್ವಜನಿಕರಿಗೆ ತೊಂದರೆ ಕೊಡುವ ಹಕ್ಕು ಯಾರಿಗೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗೋವುಗಳ ಕಳ್ಳಸಾಗಣೆ ಜಾಲಕ್ಕೆ ಮರಣಮೃದಂಗ
ರಾಜ್ಯದ ಗಡಿ ಭಾಗಗಳಲ್ಲಿ ದಶಕಗಳಿಂದ ನಡೆಯುತ್ತಿದ್ದ ಅಕ್ರಮ ಗೋವುಗಳ ಕಳ್ಳಸಾಗಣೆಗೆ ಕಡಿವಾಣ ಹಾಕಲು ಸರ್ಕಾರ ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ರಾಜ್ಯದಾದ್ಯಂತ ಇರುವ ಅನಧಿಕೃತ ಜಾನುವಾರು ಮಾರುಕಟ್ಟೆಗಳನ್ನು ತಕ್ಷಣವೇ ಮುಚ್ಚುವಂತೆ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಗಡಿ ಜಿಲ್ಲೆಗಳಲ್ಲಿ ತೀವ್ರ ಕಣ್ಗಾವಲು ಹೆಚ್ಚಿಸಲಾಗಿದ್ದು, ಅಕ್ರಮ ಸಾಗಣೆದಾರರ ಜಾಲವನ್ನು ಧ್ವಂಸಗೊಳಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಆ ಮೂಲಕ ರಾಜ್ಯದ ಸಂಪನ್ಮೂಲ ಮತ್ತು ಕಾನೂನು ಗೌರವವನ್ನು ಎತ್ತಿ ಹಿಡಿಯಲು ಬಿಜೆಪಿ ಸರ್ಕಾರ ಮುಂದಾಗಿದೆ.
ಹಿಂಸಾಚಾರ ಮತ್ತು ಕಲ್ಲು ತೂರಾಟಕ್ಕೆ ಬ್ರೇಕ್
ಪ್ರತಿಭಟನೆಯ ಹೆಸರಿನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವ ಮತ್ತು ಭದ್ರತಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸುವ ಕಿಡಿಗೇಡಿಗಳಿಗೆ ಸರ್ಕಾರ ತೀವ್ರ ಎಚ್ಚರಿಕೆ ನೀಡಿದೆ. ಇಂತಹ ಹಿಂಸಾತ್ಮಕ ಕೃತ್ಯಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅಳವಡಿಸಿಕೊಂಡಿರುವ ಸುವೇಂದು ಅಧಿಕಾರಿ ಸರ್ಕಾರ, ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮುಕ್ತ ಅವಕಾಶ ನೀಡಿದೆ. ಶಾಂತಿ ಕದಡುವ ಪ್ರಯತ್ನ ಮಾಡುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸುವ ಸಾಧ್ಯತೆಯೂ ಇದೆ.
ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರವು ಕೈಗೊಂಡಿರುವ ಈ ಕಠಿಣ ಕ್ರಮಗಳು ರಾಜ್ಯದಲ್ಲಿ ಸಂಚಲನ ಮೂಡಿಸಿವೆ. ಅಭಿವೃದ್ಧಿ ಮತ್ತು ಶಿಸ್ತಿನ ಆಡಳಿತ ನೀಡುವ ಗುರಿಯೊಂದಿಗೆ ಹೊರಟಿರುವ ಸರ್ಕಾರಕ್ಕೆ ಸಾರ್ವಜನಿಕ ವಲಯದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.








