ಹೊಸಪೇಟೆ: ಕರ್ನಾಟಕ ರಾಜಕೀಯದಲ್ಲಿ ಈಗ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ, ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ಆ ಖಾಲಿಯಾಗುವ ಕುರ್ಚಿಗೆ ವಾರಸುದಾರರು ಯಾರು ಎಂಬ ಯಕ್ಷಪ್ರಶ್ನೆ ಇಡೀ ರಾಜ್ಯವನ್ನು ಕಾಡುತ್ತಿದೆ ಎಂದು ಅವರು ಲೇವಡಿ ಮಾಡಿದ್ದಾರೆ.
ವಿಜಯೇಂದ್ರ ಅವರು ಹೊಸಪೇಟೆಯಲ್ಲಿ ಬಿಜೆಪಿ ಜಿಲ್ಲಾ ಘಟಕ ಆಯೋಜಿಸಿದ್ದ ದೀನ್ ದಯಾಲ್ ಉಪಾಧ್ಯಾಯ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದರು. ಸಿದ್ದರಾಮಯ್ಯ ಅವರು ಅಧಿಕಾರದಿಂದ ಕೆಳಗಿಳಿದ ತಕ್ಷಣ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ತಾಕತ್ತು ಅಥವಾ ಸ್ಪಷ್ಟತೆ ಕಾಂಗ್ರೆಸ್ ಪಕ್ಷಕ್ಕಿಲ್ಲ. ಅಲ್ಲಿನ ಆಂತರಿಕ ಕಚ್ಚಾಟ ಮತ್ತು ಬಣ ರಾಜಕೀಯದ ಗೊಂದಲಗಳು ಅಷ್ಟು ಸುಲಭವಾಗಿ ಇತ್ಯರ್ಥವಾಗುವ ಲಕ್ಷಣಗಳಿಲ್ಲ. ಈ ಅಧಿಕಾರದಾಹದ ಸಂಘರ್ಷ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ವಿಜಯೇಂದ್ರ ಭವಿಷ್ಯ ನುಡಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ನ ಆಂತರಿಕ ಕಿತ್ತಾಟದಿಂದಾಗಿ ರಾಜ್ಯದ ಆಡಳಿತ ಮತ್ತು ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ಹಳಿ ತಪ್ಪಿದೆ ಎಂದು ಕಿಡಿಕಾರಿದರು. ಕಳೆದ ಮೂರು ವರ್ಷಗಳಿಂದ ಉಂಟಾಗಿರುವ ಆರ್ಥಿಕ ಕುಸಿತವನ್ನು ಸರಿಪಡಿಸುವುದು ಈಗ ಯಾರಿಂದಲೂ ಸಾಧ್ಯವಿಲ್ಲದ ಮಾತಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ರೈತರು ಮತ್ತು ಬಡವರ ಕಲ್ಯಾಣ ಹೇಗೆ ಸಾಧ್ಯ? ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ಕುಂಠಿತವಾಗಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ರೈತರ ಸಂಕಷ್ಟದ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನ್ನದಾತರ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ. ಹಲವು ಜಿಲ್ಲೆಗಳಲ್ಲಿ ಕೃತಕವಾಗಿ ರಸಗೊಬ್ಬರ ಅಭಾವ ಸೃಷ್ಟಿಸುವ ಪಿತೂರಿ ನಡೆಯುತ್ತಿದೆ. ಈ ಮೂಲಕ ರೈತರ ಬದುಕಿನ ಜೊತೆ ಸರ್ಕಾರ ಆಟವಾಡುತ್ತಿದೆ. ಒಟ್ಟಾರೆಯಾಗಿ ಕಾಂಗ್ರೆಸ್ ಸರ್ಕಾರವು ರಾಜ್ಯದ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಈ ಸರ್ಕಾರದಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಹರಿಹಾಯ್ದರು.
ಇದೇ ವೇಳೆ ರಾಜ್ಯಪಾಲರ ಭೇಟಿ ಮತ್ತು ಸರ್ಕಾರದ ನಡೆಯ ಬಗ್ಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರ ಭೇಟಿಗೆ ಸಮಯ ಕೇಳುವ ಕನಿಷ್ಠ ಜವಾಬ್ದಾರಿ ಇರಬೇಕಿತ್ತು. ಆದರೆ ಸಂಪುಟ ಸಭೆಯ ಟಿಪ್ಪಣಿಯಲ್ಲಿ ಅದರ ಉಲ್ಲೇಖವಿಲ್ಲದಿರುವುದು ಆಶ್ಚರ್ಯಕರ. ಕಾಂಗ್ರೆಸ್ ಗೆ 138 ಶಾಸಕರ ಬಲವಾದ ಬೆಂಬಲ ಇರುವಾಗ ಬಿಜೆಪಿ ಹಸ್ತಕ್ಷೇಪ ಮಾಡುತ್ತಿದೆ ಎನ್ನುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ರಾಜ್ಯದ ಜನರು ಅವರಿಗೆ ಆಡಳಿತ ನಡೆಸಲು ಆಶೀರ್ವಾದ ಮಾಡಿದ್ದಾರೆ, ಅವರು ಕೆಲಸ ಮಾಡಲಿ. ನಾವು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.








