ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯವನ್ನು ಜಾಗತಿಕ ಮಟ್ಟಕ್ಕೆ ಏರಿಸುವ ಉದ್ದೇಶದಿಂದ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ. ಸುಮಾರು 1,400 ಕೋಟಿ ರೂಪಾಯಿಗೂ ಅಧಿಕ ಮೊತ್ತದ ವಿವಿಧ ಯೋಜನೆಗಳಿಗೆ ಕೇಂದ್ರದ ಸಹಕಾರ ಮತ್ತು ಅನುಮೋದನೆಯನ್ನು ಅವರು ಈ ಸಂದರ್ಭದಲ್ಲಿ ಕೋರಿದ್ದಾರೆ.
1. ಪ್ರೆಸಿಡೆಂಟ್ಸ್ ಕಲರ್ ಗೌರವ
ಕರ್ನಾಟಕ ಪೊಲೀಸ್ ಇಲಾಖೆಯ ಶಿಸ್ತು ಮತ್ತು ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಗಳ ಅತ್ಯುನ್ನತ ಪ್ರೆಸಿಡೆಂಟ್ಸ್ ಕಲರ್ ಪ್ರಶಸ್ತಿಯನ್ನು ಶೀಘ್ರವಾಗಿ ಘೋಷಿಸುವಂತೆ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಈ ಪ್ರಸ್ತಾವನೆ ಈಗಾಗಲೇ ಕೇಂದ್ರದ ಪರಿಶೀಲನೆಯಲ್ಲಿದ್ದು, ಶೀಘ್ರ ಅನುಮೋದನೆ ಸಿಕ್ಕರೆ ಇಲಾಖೆಯ ಗೌರವ ಇಮ್ಮಡಿಯಾಗಲಿದೆ.
2. ಹೊಸ ಐಆರ್ ಬಿ ಬೆಟಾಲಿಯನ್ ಗಳ ಸ್ಥಾಪನೆ
ವಿಜಯನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ತಲಾ ಒಂದು ಇಂಡಿಯಾ ರಿಸರ್ವ್ ಬೆಟಾಲಿಯನ್ (ಐಆರ್ ಬಿ) ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಸುಮಾರು 243.87 ಕೋಟಿ ರೂಪಾಯಿಗಳ ಅನುದಾನದ ಅಗತ್ಯವಿದ್ದು, ಶೀಘ್ರ ಮಂಜೂರಾತಿ ನೀಡುವಂತೆ ಕೇಂದ್ರಕ್ಕೆ ವಿನಂತಿಸಲಾಗಿದೆ.
3. ನಗರಗಳ ಸುರಕ್ಷತೆಗೆ ಕಮಾಂಡ್ ಸೆಂಟರ್
ರಾಜ್ಯದ ನಾಲ್ಕು ಪ್ರಮುಖ ನಗರಗಳಲ್ಲಿ ಅತ್ಯಾಧುನಿಕ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಗಳ ಸ್ಥಾಪನೆ ಹಾಗೂ ಸಂವಹನ ಉಪಕರಣಗಳ ಖರೀದಿಗಾಗಿ 280 ಕೋಟಿ ರೂಪಾಯಿಗಳ ಯೋಜನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದ್ದು, ಈ ಹಣ ಬಿಡುಗಡೆಗೆ ಒತ್ತಾಯಿಸಲಾಗಿದೆ.
4. ಸೈಬರ್ ಅಪರಾಧಕ್ಕೆ ಬ್ರೇಕ್ ಹಾಕಲು ಕೆ 4 ಸಿ ಯುನಿಟ್
ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧಗಳು ದೊಡ್ಡ ಸವಾಲಾಗಿದೆ. ಇದನ್ನು ಎದುರಿಸಲು 360 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಸೈಬರ್ ಕ್ರೈಮ್ ಕಂಟ್ರೋಲ್ ಅಂಡ್ ಕೋಆರ್ಡಿನೇಷನ್ ಯುನಿಟ್ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಈ ಬೃಹತ್ ಯೋಜನೆಗೆ ಕೇಂದ್ರದ ಬೆಂಬಲ ಕೋರಲಾಗಿದೆ.
5. ಪೊಲೀಸ್ ಠಾಣೆಗಳ ಆಧುನೀಕರಣ ಮತ್ತು ಸಿಸಿಟಿವಿ
ಸುಪ್ರೀಂ ಕೋರ್ಟ್ ನ ನಿರ್ದೇಶನದಂತೆ ರಾಜ್ಯದ ಪೊಲೀಸ್ ಠಾಣೆಗಳಲ್ಲಿನ ಸಿಸಿಟಿವಿ ವ್ಯವಸ್ಥೆಯನ್ನು ಮೇಲ್ದರ್ಜೆಗೆ ಏರಿಸಲು 278.26 ಕೋಟಿ ರೂಪಾಯಿ ಹಾಗೂ ತರಬೇತಿ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಗೆ 258.53 ಕೋಟಿ ರೂಪಾಯಿಗಳ ನೆರವು ಕೋರಲಾಗಿದೆ.
6. ಜೈಲುಗಳ ಸುಧಾರಣೆ ಮತ್ತು ಸಿಎಸ್ಆರ್ ನಿಧಿ
ಕಾರಾಗೃಹಗಳಲ್ಲಿ ಸಿಸಿಟಿವಿ ಮತ್ತು ಭದ್ರತಾ ಉಪಕರಣಗಳ ಖರೀದಿಗಾಗಿ 20 ಕೋಟಿ ರೂಪಾಯಿ ಬಿಡುಗಡೆ ಮಾಡಲು ಮನವಿ ಮಾಡಲಾಗಿದೆ. ಇದರೊಂದಿಗೆ, ಪೊಲೀಸ್ ಕಲ್ಯಾಣ ಚಟುವಟಿಕೆಗಳಿಗೆ ಖಾಸಗಿ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯನ್ನು ಬಳಸಿಕೊಳ್ಳಲು ಅವಕಾಶ ನೀಡುವಂತೆ ಕಂಪನಿ ಕಾಯ್ದೆಗೆ ತಿದ್ದುಪಡಿ ತರಲು ವಿನಂತಿಸಲಾಗಿದೆ.
7. ಮೋಟಾರು ವಾಹನ ನಿಯಮಗಳ ಗಡುವು ವಿಸ್ತರಣೆ
ಕೇಂದ್ರ ಮೋಟಾರು ವಾಹನಗಳ ನಿಯಮ 52 ಎ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಸಂಬಂಧಪಟ್ಟ ಸಚಿವಾಲಯದ ಜೊತೆ ಚರ್ಚಿಸಿ ಅನುಮೋದನೆ ಕೊಡಿಸಲು ಗೃಹ ಸಚಿವರಿಗೆ ಮನವಿ ಮಾಡಲಾಗಿದೆ.
ಕರ್ನಾಟಕದ ಪೊಲೀಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಆಧುನೀಕರಿಸಲು ಡಿ.ಕೆ. ಶಿವಕುಮಾರ್ ಅವರು ಬೃಹತ್ ಪಟ್ಟಿಯನ್ನೇ ಅಮಿತ್ ಶಾ ಅವರ ಮುಂದೆ ಇಟ್ಟಿದ್ದಾರೆ. ಕೇಂದ್ರ ಸರ್ಕಾರ ಈ ಪ್ರಸ್ತಾವನೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರೆ ಕರ್ನಾಟಕದ ಭದ್ರತಾ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ನಿರೀಕ್ಷಿಸಬಹುದಾಗಿದೆ.








