ಬೆಳಗಾವಿ ಜಿಲ್ಲೆಯ ಸಂಕೇಶ್ವರ ತಾಲೂಕಿನ ಹೆಬ್ಬಾಳ ಗ್ರಾಮದ ಅರವಳಿಕೆ ತಜ್ಞ ಡಾ. ಕಿರಣ್ ಹೊನ್ನಣ್ಣನವರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಹಲವು ಅಚ್ಚರಿಯ ಸಂಗತಿಗಳು ಬೆಳಕಿಗೆ ಬರುತ್ತಿವೆ. ಈ ಪ್ರಕರಣದಲ್ಲಿ ಪತ್ನಿ ಡಾ. ಪ್ರಿಯಾಂಕಾ ಅವರನ್ನು ಪೊಲೀಸರು ಆರೋಪಿಯಾಗಿ ಬಂಧಿಸಿದ್ದು, ವಿಚಾರಣೆ ಮುಂದುವರಿದಿದೆ.
ಪೊಲೀಸರ ಮಾಹಿತಿ ಪ್ರಕಾರ, ಡಾ. ಕಿರಣ್ ಮತ್ತು ವಿಜಯಪುರ ಮೂಲದ ನೇತ್ರ ತಜ್ಞೆ ಡಾ. ಪ್ರಿಯಾಂಕಾ ಸುಮಾರು 9 ವರ್ಷಗಳ ಹಿಂದೆ ಎರಡನೇ ವಿವಾಹವಾಗಿದ್ದರು. ಇಬ್ಬರಿಗೂ ಇದು ಎರಡನೇ ಮದುವೆಯಾಗಿದ್ದು, ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ಬಳಿಕ ಪ್ರೀತಿಸಿ ವಿವಾಹವಾಗಿದ್ದರು ಎನ್ನಲಾಗಿದೆ.
ವೈದ್ಯೆಯಾಗಿದ್ದರೂ ಡಾ. ಪ್ರಿಯಾಂಕಾ ಖಾಸಗಿ ಪ್ರಾಕ್ಟೀಸ್ ನಡೆಸದೆ ಮನೆಯಲ್ಲೇ ಇದ್ದರು. ಅಲ್ಲದೆ, ಪತಿಯ ಕುಟುಂಬದವರೊಂದಿಗೆ ಹೆಚ್ಚು ಸಂಪರ್ಕ ಇಟ್ಟುಕೊಳ್ಳುತ್ತಿರಲಿಲ್ಲ. ಪತಿಯ ಸಂಬಂಧಿಕರು ಮನೆಗೆ ಬಂದಾಗ ಆಗಾಗ ಗಲಾಟೆಗಳು ನಡೆಯುತ್ತಿದ್ದವು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕುಟುಂಬದ ಆಪ್ತರ ಪ್ರಕಾರ, ಉತ್ತಮ ಆರ್ಥಿಕ ಹಿನ್ನೆಲೆಯ ಕುಟುಂಬದಿಂದ ಬಂದಿದ್ದ ಪ್ರಿಯಾಂಕಾ ಅವರಿಗಿಂತ ಭಿನ್ನವಾಗಿ, ಸಾಮಾನ್ಯ ಕುಟುಂಬದಿಂದ ಬಂದಿದ್ದ ಡಾ. ಕಿರಣ್ ಬಡ ರೋಗಿಗಳ ಚಿಕಿತ್ಸೆಗೆ ವಿಶೇಷ ಆದ್ಯತೆ ನೀಡುತ್ತಿದ್ದರು. ಅವರ ಸರಳ ಸ್ವಭಾವದಿಂದ ಸಮಾಜದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಆದರೆ, ಪತ್ನಿಯೊಂದಿಗೆ ಆಗಾಗ ಉಂಟಾಗುತ್ತಿದ್ದ ಕೌಟುಂಬಿಕ ಕಲಹದಿಂದ ಇತ್ತೀಚಿನ ದಿನಗಳಲ್ಲಿ ಅವರು ಮೌನವಾಗಿದ್ದರು ಎನ್ನಲಾಗಿದೆ. ಆದರೂ ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಯಾರೊಂದಿಗೂ ಹಂಚಿಕೊಂಡಿರಲಿಲ್ಲ ಎಂದು ತಿಳಿದುಬಂದಿದೆ.
ತನಿಖೆಯ ಪ್ರಕಾರ, ಪತಿಯ ಮೇಲೆ ನಿರಂತರ ಅನುಮಾನ ವ್ಯಕ್ತಪಡಿಸುತ್ತಿದ್ದ ಕಾರಣ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ಹಿನ್ನೆಲೆಯಲ್ಲೇ ನಿನ್ನೆ ಬೆಳಗ್ಗೆ ಡಾ. ಕಿರಣ್ ಅವರಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ವೇಳೆ ಅವರ ಪುತ್ರ ನಿಹಿಲ್ ಮೇಲೆಯೂ ಚಾಕುವಿನಿಂದ ಹಲ್ಲೆ ನಡೆದಿದ್ದು, ಸ್ಥಳಕ್ಕೆ ತೆರಳಿದ ಪೊಲೀಸರು ಬಾಲಕ ಉಸಿರಾಡುವುದನ್ನು ಗಮನಿಸಿ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ಮುಂದುವರಿದಿದೆ.
ಪ್ರಾಥಮಿಕ ವಿಚಾರಣೆಯಲ್ಲಿ ತಾನೇ ಈ ಕೃತ್ಯ ಎಸಗಿರುವುದಾಗಿ ಡಾ. ಪ್ರಿಯಾಂಕಾ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆಯ ಬಳಿಕ ಅವರು ಇನ್ಸುಲಿನ್ ಚುಚ್ಚಿಕೊಂಡಿದ್ದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಈಶ್ವರ್ ಹಸಬಿ ಅವರ ಪ್ರಕಾರ, ಪ್ರಿಯಾಂಕಾ ಅವರ ಆರೋಗ್ಯ ಸ್ಥಿರವಾಗಿದೆ. ಸದ್ಯ ರಕ್ತದಲ್ಲಿನ ಸಕ್ಕರೆ ಪ್ರಮಾಣದ ಏರಿಳಿತವನ್ನು ಹೊರತುಪಡಿಸಿ ಬೇರೆ ಯಾವುದೇ ತುರ್ತು ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ. ಮಾನಸಿಕ ಅಥವಾ ಇತರ ಕಾಯಿಲೆಗಳ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಪ್ರಕರಣದ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು, ವೈದ್ಯಕೀಯ ವರದಿ ಹಾಗೂ ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.








