ಮಂಡ್ಯ: ನಾಗಮಂಗಲ ತಾಲೂಕಿನ ದುದ್ದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಉಚಿತ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.
ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್), ಕಿದ್ವಾಯಿ ಸಂಸ್ಥೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಆದಿಚುಂಚನಗಿರಿ ಆಸ್ಪತ್ರೆ ಮತ್ತು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿತ್ತು.
ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶಿಬಿರಕ್ಕೆ ಚಾಲನೆ ನೀಡಿ, ಗ್ರಾಮೀಣ ಭಾಗದ ಜನರು ಇಂತಹ ಉಚಿತ ಆರೋಗ್ಯ ಸೇವೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ರೀತಿಯ ಆರೋಗ್ಯ ತಪಾಸಣಾ ಶಿಬಿರಗಳನ್ನು ಶೀಘ್ರದಲ್ಲೇ ಮೇಲುಕೋಟೆ ಕ್ಷೇತ್ರದ ವಿವಿಧ ಗ್ರಾಮಗಳಲ್ಲೂ ಆಯೋಜಿಸಲಾಗುವುದು ಎಂದು ಭರವಸೆ ನೀಡಿದರು.
ಶಿಬಿರದಲ್ಲಿ 250ಕ್ಕೂ ಹೆಚ್ಚು ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಹೃದಯ, ನರ, ಮೂತ್ರಪಿಂಡ, ಮಧುಮೇಹ, ಕ್ಯಾನ್ಸರ್, ಸ್ತ್ರೀರೋಗ, ಕೀಲುಮೂಳೆ, ಕಣ್ಣು, ಕಿವಿ-ಮೂಗು-ಗಂಟಲು ಹಾಗೂ ದಂತ ಸಮಸ್ಯೆಗಳಿಗೆ ತಜ್ಞ ವೈದ್ಯರಿಂದ ಉಚಿತ ತಪಾಸಣೆ ನಡೆಸಲಾಯಿತು. ಈಗಾಗಲೇ 2 ಸಾವಿರಕ್ಕೂ ಅಧಿಕ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಗಿದೆ.
ಜನರ ಅನುಕೂಲಕ್ಕಾಗಿ ಪ್ರತಿ ಪಂಚಾಯಿತಿಯಿಂದಲೂ ಉಚಿತ ಬಸ್ ವ್ಯವಸ್ಥೆ ಮಾಡಲಾಗಿತ್ತು. 5 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಶಸ್ತ್ರಚಿಕಿತ್ಸೆ ಅಥವಾ ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ರೋಗಿಗಳನ್ನು ಗುರುತಿಸಿ, ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಕಿದ್ವಾಯಿ ಹಾಗೂ ಮಿಮ್ಸ್ ಸಹಯೋಗದಲ್ಲಿ ಮುಂದಿನ ಚಿಕಿತ್ಸೆಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.
ಶಿಬಿರಕ್ಕೆ ಆಗಮಿಸಿದವರಿಗೆ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು.
ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಮಾತನಾಡಿ, ತೀವ್ರ ಕಾಯಿಲೆಗಳಿಂದ ಬಳಲುತ್ತಿರುವ ಹಾಗೂ ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಿ, ಅವರಿಗೆ ಅಗತ್ಯವಾದ ಹೆಚ್ಚಿನ ಚಿಕಿತ್ಸೆ ಮತ್ತು ಆರೋಗ್ಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಶಿಬಿರದ ಯಶಸ್ಸಿಗೆ ಸಹಕರಿಸಿದ ಆದಿಚುಂಚನಗಿರಿ ಮಠದ ಶ್ರೀಗಳು, ಜಿಲ್ಲಾಡಳಿತ, ಆರೋಗ್ಯ ಇಲಾಖೆ, ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೃತಜ್ಞತೆ ಸಲ್ಲಿಸಿದರು.








