ಬೆಂಗಳೂರು : ರಾಜ್ಯದಲ್ಲಿ ಪ್ರತಿದಿನ ಕೊರೊನಾ ಸ್ಫೋಟವಾಗಿದ್ದು, ಇದಕ್ಕೆ ಹೊರ ರಾಜ್ಯಗಳಿಂದ ಹೆಚ್ಚಿನ ಜನರು ಬಂದಿದ್ದೇ ಕಾರಣ ಎಂದು ಆರೋಗ್ಯ ಸಚಿವ ಬಿ.ಶ್ರೀ ರಾಮುಲು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಾಲಕಾಲಕ್ಕೆ ತ್ವರಿತವಾಗಿ ಅನೇಕ ಉಪಕ್ರಮಗಳನ್ನು ಕೈಗೊಳ್ಳುತ್ತಲೇ ಬಂದಿದೆ. ಆದರೆ ಲಾಕ್ ಡೌನ್ ತೆರವು ಮಾಡಿದ ನಂತರ ಹೊರ ರಾಜ್ಯಗಳಿಂದ ಹೆಚ್ಚು ಜನ ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹೆಚ್ಚಿದೆ.
ಕೆಲವು ಕಡೆ ಲ್ಯಾಬ್ ಟೆಕ್ನೀಷಿಯನ್ ಗಳು ಸೋಂಕಿಗೆ ತುತ್ತಾಗಿದ್ದರಿಂದ ಲ್ಯಾಬ್ ಗಳನ್ನು ಸೀಲ್ ಮಾಡಲಾಯಿತು. ಇದರಿಂದ ಪರೀಕ್ಷೆ ಮಾಡಲು ತೊಂದರೆಯಾಯಿತು. ಈ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷಾ ಪ್ರಮಾಣದಲ್ಲಿ ಹೆಚ್ಚಳ ಮಾಡಿ ಹಾಗೂ ಜಿಲ್ಲಾ ಮಟ್ಟದಲ್ಲಿ ಲ್ಯಾಬ್ ಗಳ ಸಂಖ್ಯೆಯನ್ನು ಜಾಸ್ತಿ ಮಾಡುತ್ತಿದ್ದೇವೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆಗೆ ನಾವು ಒಂದು ತಂಡವಾಗಿ ಸೋಂಕಿನ ನಿಯಂತ್ರಣಕ್ಕಾಗಿ ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಭಾರತದಲ್ಲಿ ಅಕ್ಟೋಬರ್, ನವೆಂಬರ್ ನಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಬಹುದು. ಈ ಬಗ್ಗೆ ಆಶಾವಾದಿಗಳಾಗಿರೋಣ ಎಂದು ರಾಮುಲು ಬರೆದುಕೊಂಡಿದ್ದಾರೆ.








