ಬೆಂಗಳೂರು: ಕೋವಿಡ್ ಸೋಂಕು ಕಾರಣ ಮುಂದಿಟ್ಟು 7ನೇ ತರಗತಿ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಪಠ್ಯವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ರಾಜ್ಯ ಸರ್ಕಾರದ ಈ ಕ್ರಮಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಪಠ್ಯ ಪುಸ್ತಕ ಕೇಸರೀಕರಣ ಮಾಡುವ ಕೆಲಸ ನಡೆದಿದೆ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕರ್ನಾಟಕ ಮಾತ್ರವಲ್ಲ ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ಕಡೆ ಇದೇ ರೀತಿ ಆಗುತ್ತಿದೆ. ಬಿಜೆಪಿಯಿಂದ ಪಠ್ಯ ಪುಸ್ತಕವನ್ನು ಕೇಸರೀಕರಣ ಮಾಡುವ ಕೆಲಸ ನಡೆಯುತ್ತಿದೆ ಎಂದು ದೂರಿದರು.
ಬಿಜೆಪಿ ಪಠ್ಯಪುಸ್ತಕದಿಂದ ಟಿಪ್ಪು ವಿಚಾರ ಮಾತ್ರವಲ್ಲ ಸಂವಿಧಾನ, ಜಾತ್ಯತೀತತೆ, ಪ್ರಜಾಪ್ರಭುತ್ವ ಮುಂತಾದ ವಿಷಯಗಳನ್ನು ಒಳಗೊಂಡ ಪಠ್ಯವನ್ನು ಕಡಿತ ಮಾಡುತ್ತಿದೆ. ಸಂವಿಧಾನ ರಚನೆಯಲ್ಲಿ ಪಾಲುದಾರರಲ್ಲದ ಬಿಜೆಪಿ ನಾಯಕರು ಹೀಗಾಗಿ ಇತಿಹಾಸವನ್ನು ಕೇಸರೀಕರಣ ಮಾಡುತ್ತಿದ್ದಾರೆ. ಬಿಜೆಪಿ, ಆರ್.ಎಸ್.ಎಸ್. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಜನರಿಗೆ ತಿಳಿಸುತ್ತಿಲ್ಲ. ಸ್ವಾತಂತ್ರ್ಯಕ್ಕಾಗಿ ಅವರು ಪಟ್ಟ ಕಷ್ಟ ಹೋರಾಟವನ್ನು ನಾಶಪಡಿಸಿ ಯುವ ಜನತೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಟಿಪ್ಪು ಬಗ್ಗೆ ಇರುವ ಇತಿಹಾಸವನ್ನು ಪಠ್ಯದಿಂದ ಅಳಿಸಿಹಾಕುವ ಪ್ರಯತ್ನ ಮಾಡಿರುವುದು ಖಂಡನೀಯ ಎಂದು ರಾಜ್ಯ ಸರ್ಕಾರದ ವಿರುದ್ಧ ಖರ್ಗೆ ಕಿಡಿಕಾರಿದರು.








