ಬೆಂಗಳೂರು : ನಂಜನಗೂಡು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಮೈಸೂರು ಟಿಹೆಚ್ ಒ ಕಚೇರಿ ಮುಂದೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯಿಸಿ, ‘ವೈದ್ಯೋ ನಾರಾಯಣೋಹರಿಃ’ ಎಂದು ನಂಬಿರುವ ಜನರ ಸೇವೆಗೆ ಮುಂದಾಗಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಮೈಸೂರಿನ ಟಿಎಚ್ಒ ಕಚೇರಿ ಮುಂದೆ ಪ್ರತಿಭಟಿಸುತ್ತಿರವ ವೈದ್ಯ ಸಿಬ್ಬಂದಿಗೆ ನನ್ನದೊಂದು ಕಳಕಳಿಯ ಮನವಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರತಿಭಟನೆ ಮಾಡಿ ರೋಗಿಗಳಿಗೆ ತೊಂದರೆ ಮಾಡಬೇಡಿ. ‘ವೈದ್ಯೋ ನಾರಾಯಣೋಹರಿಃ’ ಎಂದು ನಂಬಿರುವ ಜನರ ಸೇವೆಗೆ ಮುಂದಾಗಿ ಎಂದು ಮನವಿ ಮಾಡಿಕೊಂಡಿದ್ದಾರೆ.
“ಈಗಾಗಲೇ ಆರೋಗ್ಯಾಧಿಕಾರಿ ನಾಗೇಂದ್ರ ಸಾವಿನ ಬಗ್ಗೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡಲು ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಆದರೂ ತಾವು ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲ. ವರದಿ ಬಂದ ತಕ್ಷಣವೇ ಯಾರೇ ತಪ್ಪಿತಸ್ಥರಾಗಿದ್ದರೂ ಸರಿ ಕ್ರಮ ಕೈಗೊಳ್ಳಲಾಗುವುದು.
ನಾಗೇಂದ್ರ ಅವರ ಸಾವಿನ ವಿಷಯದಲ್ಲಿ ಸರ್ಕಾರಕ್ಕೆ ಯಾರನ್ನೂ ರಕ್ಷಿಸುವ ಇಚ್ಛೆಯಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಕ್ಷಮೆಯಿಲ್ಲ. ಪ್ರತಿಭಟಿಸುವುದನ್ನು ನಿಲ್ಲಿಸಿ. ಕಾರ್ಯಪ್ರವೃತ್ತರಾಗಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ. ಜನ ಸೇವೆಯೇ ಜನಾರ್ಧನ ಸೇವೆ. ತನಿಖೆಯ ನಂತರ ಸತ್ಯ ತಿಳಿದೇ ತಿಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ ಸುಧಾಕರ್.









