ಬೆಂಗಳೂರು ; ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಹಾಗೂ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮಗಳ ಪ್ರಗತಿಪರಿಶೀಲನಾ ಸಭೆ ನಡೆಸಿದರು.
ವಿಕಾಸಸೌಧದ ಕೃಷಿ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ 2019-20 ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 3,15,812 ಕ್ವಿಂಟಾಲ್ ತೊಗರಿಯನ್ನು ಮಂಡಳಿ ರೈತರಿಂದ ನೇರವಾಗಿ ಖರೀದಿಸಿದ್ದು, ರೂ.192,64,532 ಹಣವನ್ನು ಅವರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಇದರಿಂದ ಮಂಡಳಿಗೆ ಸೇವಾಶುಲ್ಕದಿಂದ ಲಾಭವಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಮಂಡಳಿಗೆ ಈ ಬಾರಿ ಮಂಡಳಿಗೆ ದುಪ್ಪಟ್ಟು ಲಾಭವಾಗಿದೆ. ಮಂಡಳಿಯ ಲಾಭದಾಯಕ ಕೆಲಸಕ್ಕೆ ಕೃಷಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸೂಕ್ಷ್ಮ ನೀರಾವರಿಯ ವಿವಿಧ ಕಾರ್ಯಕ್ರಮಗಳನ್ನು ಪ್ರಸ್ತುತ ಕೃಷಿ,ತೋಟಗಾರಿಕೆ,ರೇಷ್ಮೆ ಹಾಗೂ ಜಲಸಂಪನ್ಮೂಲ ಇಲಾಖೆಗಳಲ್ಲಿ ನಿರ್ವಹಿಸಲಾಗುತ್ತಿರುತ್ತದೆ. ಸೂಕ್ಷ್ಮ ನೀರಾವರಿ ಯೋಜನೆಗಳ ಉಪಯೋಗ ಕುರಿತು ರೈತ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು ಹಾಗೂ ಕೃಷಿ,ತೋಟಗಾರಿಕೆ ಮತ್ತು ರೇಷ್ಮೆ ಮುಂತಾದ ಇಲಾಖೆಗಳಲ್ಲಿ ಅನುಷ್ಠಾನ ಮಾಡುತ್ತಿರುವ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಏಕಗವಾಕ್ಷಿ ಮಾದರಿಯಲ್ಲಿ ನಿಗಮವನ್ನು ಸ್ಥಾಪಿಸಲಾಗಿರುತ್ತದೆ.. ಸೂಕ್ಷ್ಮ ನೀರಾವರಿ ಕಾರ್ಯಕ್ರಮಗಳಿಗೆ ಪ್ರತ್ಯೇಕವಾಗಿ ಒತ್ತು ನೀಡಲು ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಕರ್ನಾಟಕ ಅಂತರಗಂಗಾ ಸೂಕ್ಷ್ಮ ನಿಗಮದ ಮೂಲಕ ಅನುಷ್ಠಾನಗೊಳಿಸುವುದು ಸೂಕ್ತ ಎಂದು ಬಿ.ಸಿ.ಪಾಟೀಲರು ಹೇಳಿದರು.
ಸಭೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ವಂದಿತಾ ಶರ್ಮಾ, ಕೃಷಿ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ಆಯುಕ್ತ ಬ್ರಿಜೆಶ್ ಕುಮಾರ್, ತೊಗರಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಕರುಣಾಕರ ರೆಡ್ಡಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.








