ಭೋಪಾಲ್: ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರ ಸದ್ಯ ಪತನದ ಅಂಚಿನಲ್ಲಿದ್ದು, ಕರ್ನಾಟಕದಲ್ಲಾದ ಹೈಡ್ರಾಮಾವೇ ಅಲ್ಲಿ ನಡೆಯುವ ಸಾಧ್ಯತೆಗಳಿವೆ. ಮೈತ್ರಿ ಸರ್ಕಾರ ಅಳಿವು ಉಳಿವಿನ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಂತೆ ಮಧ್ಯಪ್ರದೇಶದ ಕಾಂಗ್ರೆಸ್ ಸಹ ಸುಪ್ರೀಂ ಬಾಗಿಲು ತಟ್ಟಲು ತೀರ್ಮಾನಿಸಿದೆ ಎನ್ನಲಾಗುತ್ತಿದೆ.
ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಬೆನ್ನಲ್ಲೇ ಅಲ್ಲಿನ ಕಾಂಗ್ರೆಸ್ ಸರ್ಕಾರದಲ್ಲಿ ಕೋಲಾಹಲ ಆರಂಭವಾಗಿತ್ತು. ಬೆಂಗಳೂರಿನಲ್ಲಿದ್ದ ಸಿಂಧಿಯಾರ ಬೆಂಬಲಿಗ ಶಾಸಕರೂ ಸಹ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಕಮಲ್ನಾಥ್ ಸರ್ಕಾರವನ್ನು ಅಲ್ಪಮತಕ್ಕೆ ಕುಸಿಯುವಂತೆ ಮಾಡಿದೆ. ಈ ಬೆಳವಣಿಗೆಗಳ ನಡುವೆ ಮಧ್ಯಪ್ರದೇಶದ ರಾಜ್ಯಪಾಲ ಲಾಲ್ ಜೀ ಟಂಡನ್ ಅವರು ಬಹುಮತ ಸಾಬೀತಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಸ್ಪೀಕರ್ ಎನ್ಪಿ ಪ್ರಜಾಪತಿಯವರಿಗೆ ಪ್ಲೋರ್ ಟೆಸ್ಟ್ ನಡೆಸುವಂತೆ ರಾಜ್ಯಪಾಲರು ಸೂಚಿಸಿದ್ದು, ಇದೇ ಸೋಮವಾರ ದಿನಾಂಕ ನಿಗದಿ ಮಾಡಿದ್ದಾರೆ.
ಸುಪ್ರೀಂ ಮೆಟ್ಟಿಲೇರಲು ಕಮಲ್ ನಾಥ್ ನಿರ್ಧಾರ
ರಾಜಕೀಯ ಬಿಕ್ಕಟ್ಟು ಹಿನ್ನೆಲೆ ಮುಖ್ಯಮಂತ್ರಿ ಕಮಲ್ ನಾಥ್ ಅವರು ನಿರಂತರವಾಗಿ ಶಾಸಕಾಂಗ ಸಭೆ ನಡೆಸುತ್ತಿದ್ದು, ಸುಪ್ರೀಂಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇನ್ನು ಕಮಲ್ನಾಥ್ ತಮ್ಮೆಲ್ಲಾ ಶಾಸಕರಿಗೂ ವಿಪ್ ಜಾರಿ ಮಾಡಿದ್ದು ನಾಳೆಯಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಸೂಚಿಸಿದ್ದಾರೆ.









