ಜಗತ್ತಿನಾದ್ಯಂತ ಕೊರೋನಾ ವೈರಸ್ ತನ್ನ ಮರಣ ಮೃದಂಗ ಮುಂದುವರಿಸಿದ್ದು, ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 109ಕ್ಕೆ ಏರಿದೆ. ಇದೀಗ ಕರ್ನಾಟಕದ ಕಲಬುರಗಿ ಯಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದ್ದು, ರಾಜ್ಯದಲ್ಲಿ 7 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಅವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಇವೆಲ್ಲದರ ನಡುವೆ ಆತಂಕಿತರಾಗಿರುವ ರಾಜ್ಯದ ಜನರಿಗೆ ಧೈರ್ಯ ಹೇಳಿ, ಜಾಗೃತಿ ಮೂಡಿಸುವತ್ತ ಗಮನ ಹರಿಸಬೇಕಾದ ರಾಜಕೀಯ ನಾಯಕರು, ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿ ಕಾಲೆಳೆಯುವ ಸಮರದಲ್ಲಿ ನಿರತರಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಕೊರೊನಾ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದು ಪರೋಕ್ಷವಾಗಿ ಸಚಿವರಿಗೆ ಟಾಂಗ್ ಕೊಟ್ಟಿದ್ದಾರೆ.

ಕೊರೊನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಇತರ ರೋಗಿಗಳ ಜೊತೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು ಎಂದು ಇನ್ನೊಂದು ಟ್ವೀಟ್ ಮಾಡಿ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದರು.

ತಮ್ಮ ಟ್ವೀಟ್ ಸಲಹೆಯನ್ನು ಮುಂದುವರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೊನಾ ವೈರಸ್ ಸೋಂಕಿತರಿಗೆ ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ ಕ್ವಾರಂಟೈನ್ ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದ್ದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಇದಕ್ಕೆ ಟ್ವೀಟ್ ಮೂಲಕ, ಕೊರೊನಾ ನಿರ್ವಹಣೆ ವಿಚಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಾಲಿಶ ಹೇಳಿಕೆ ನೀಡಿದ್ದನ್ನು ಗಮನಿಸಿದ್ದೇನೆ. ವಿಪತ್ತನ್ನು ಎದುರಿಸಲು ಸಿಎಂ ಯಡಿಯೂರಪ್ಪ ಅವರ ಆದೇಶದಂತೆ ರಾಜ್ಯಸರ್ಕಾರ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು ಆರೋಗ್ಯ ಸಚಿವ ಶ್ರೀರಾಮುಲು ಮತ್ತು ನಾನು ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುತ್ತಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದರು.

ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವುದು, ಸೋಂಕಿತರ ಪತ್ತೆಗೆ ಸರ್ವ ಪ್ರಯತ್ನ, ಸೋಂಕಿತರ ಚಿಕಿತ್ಸೆಗೆ ಎಲ್ಲ ಸೌಕರ್ಯ, ಪ್ರತ್ಯೇಕ ನಿಗಾ ಘಟಕಗಳು, ತಜ್ಞ ವೈದ್ಯರ ಮತ್ತು ಇತರ ಸಿಬ್ಬಂದಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ರಾಜ್ಯಸರ್ಕಾರ ತೆಗೆದುಕೊಂಡಿದೆ. ಇದನ್ನು ಜನರೂ ಮೆಚ್ಚಿಕೊಂಡಿದ್ದಾರೆ ಎಂದೂ ತಿಳಿಸಿದ್ದರು.

ಇಷ್ಟೇ ಅಲ್ಲದೆ ಮಾಜಿ ಮುಖ್ಯಮಂತ್ರಿಗಳಲ್ಲಿ ನನ್ನ ವಿನಂತಿಯೆಂದರೆ, ಈ ಸೂಕ್ಷ್ಮ ಪರಿಸ್ಥಿತಿಗಳಲ್ಲಿ ರಾಜಕೀಯ ಬದಿಗಿಟ್ಟು, ಜಾಗೃತಿ ಮೂಡಿಸುವ ಕೆಲಸದಲ್ಲಿ ಆದಷ್ಟು ಸಹಕರಿಸಿ. ತಾವು ಕೂಡ ಎಚ್ಚರಿಕೆಯಿಂದ ಇದ್ದು ಸುರಕ್ಷಿತವಾಗಿರಿ. ಇಂತಹ ಸಂದರ್ಭಗಳಲ್ಲಿ ಜನರಲ್ಲಿ ಆತಂಕ ಹೆಚ್ಚಿಸುವ ಯಾವುದೇ ಪ್ರಯತ್ನ ಅಪೇಕ್ಷಣೀಯವಲ್ಲ ಎಂದು ಟ್ವೀಟ್ ನಲ್ಲೇ ಕುಟುಕಿದ್ದರು
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಟ್ವೀಟ್ ಗೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಕೂಡ ರೀಟ್ವೀಟ್ ಮಾಡಿ , ಕುಮಾರಸ್ವಾಮಿಯವರೇ, ನಾನು ಹಾಗೂ ಸುಧಾಕರ್ ಅವರು ಜೊತೆಜೊತೆಗೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ. ತಮ್ಮ ಗೊಂದಲದಲ್ಲಿ ಯಾವುದೇ ಹುರುಳಿಲ್ಲ. ಇತ್ತೀಚೆಗೆ ಹೆಚ್ಚಾಗಿ ಗೊಂದಲದಲ್ಲಿರುವ ತಾವು, ಜನರನ್ನು ಗೊಂದಲಕ್ಕೆ ದೂಡುವ ಕೆಲಸಕ್ಕೆ ಕೈಹಾಕದಿರಿ ಎಂದು ವಿನಂತಿಸುತ್ತೇನೆ ಎಂದು ಕಾಲೆಳೆದಿದ್ದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಅವರ ಟ್ವೀಟ್ ಗೆ ಕಿಡಿಕಿಡಿಯಾಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತೆ ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರ ಹಾಗೂ ಸಚಿವರ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ವಿರೋಧ ಪಕ್ಷದ ನಾಯಕನಾದ ನಾನು ಸರ್ಕಾರಕ್ಕೆ ಸಲಹೆ ನೀಡುವುದು ನನ್ನ ಕರ್ತವ್ಯ, ನನ್ನ ಹಕ್ಕು. ಮತ್ತು, ಅದೇ ವೃತ್ತಿ ಧರ್ಮ. ರಾಜಕೀಯ ಮಾಡಲು ಬೇರೆ ಅವಕಾಶಗಳಿವೆ. ಅಲ್ಲಿ ಮಾಡೋಣ ಎಂದು ಕಿಡಿಕಾರಿದ್ದಾರೆ.

ಈಗಲೂ ಹೇಳುತ್ತಿದ್ದೇನೆ ಇದು ನನ್ನ ಸಲಹೆ. ಇದರಲ್ಲಿಯೂ ರಾಜಕೀಯ ಹುಡುಕುವವರು ‘ಪ್ರಚಾರ ಪ್ರಿಯ’ರಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ವೈರಸ್ ಕುರಿತು ಸರ್ಕಾರಕ್ಕೆ ಕೆಲ ಸಲಹೆಗಳನ್ನು ನೀಡಿದ್ದೆ. ಇದರಲ್ಲಿ ರಾಜಕೀಯ ಹುಡುಕಿರುವ ಸಚಿವರೊಬ್ಬರು ಸರ್ಕಾರ ಎಲ್ಲ ರೀತಿಯಲ್ಲೂ ಮುಂಜಾಗ್ರತಾ ಕ್ರಮಗಳನ್ನು ವಹಿಸಿರುವುದಾಗಿ ಹೇಳಿದ್ದಾರೆ. ಸರಿ, ಸಿಎಂ ಬಿಎಸ್ ವೈ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗದೇ ನಿಯಮ ಉಲ್ಲಂಘಿಸಿದ್ದು ಯಾವ ಕ್ರಮ ಎಂದು ಪರೋಕ್ಷವಾಗಿ ಸುಧಾಕರ್ ಗೆ ಕುಟುಕಿದ್ದಾರೆ.

ಕೊರೊನಾ ವೈರಸ್ ತಡೆಗೆ ಮುಂಜಾಗ್ರತೆಯೇ ಮದ್ದು. ಇದಕ್ಕಾಗಿಯೇ ಎಲ್ಲ ವಿಮಾನ ನಿಲ್ದಾಣಗಳಲ್ಲಿ, ಪ್ರತಿಯೊಬ್ಬರ ತಪಾಸಣೆ ನಡೆಯುತ್ತಿದೆ. ಈ ತಪಾಸಣೆಯನ್ನು ಮುಖ್ಯಮಂತ್ರಿಯೇ ನಿರ್ಲಕ್ಷಿಸುವುದು ಎಂಥ ಕಟ್ಟುನಿಟ್ಟಿನ ಕ್ರಮ? ಇದರಿಂದ ಜನರಿಗೆ ಹೋಗುವ ಸಂದೇಶವೇನು? ಈ ಬಗ್ಗೆ ‘ರಾಜಕೀಯ’ ಹುಡುಕಿದ ಸಚಿವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.








