ಅತ್ತ ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ರಾಷ್ಟ್ರ ರಾಜಧಾನಿ ದೆಹಲಿಯ ಶಾಹಿನ್ ಬಾಗ್ ಕೊರೋನಾ ಭಯದಿಂದಾಗಿ ಖಾಲಿಯಾಗಿದ್ದರೆ, ಇತ್ತ ದೆಹಲಿಯ ಜಹಾಂಗೀರ್ ಪುರಿಯಲ್ಲಿನ ಸಿಎಎ ವಿರೋಧಿ ಪ್ರತಿಭಟನೆಯ ಅಯೋಜಕರಿಗೆ ಕೊರೊನಾ ಸೋಂಕಿನ ಶಂಕೆ ವ್ಯಕ್ತವಾಗಿದೆ.
ದೆಹಲಿಯ ಜಹಾಂಗೀರ್ ಪುರಿಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯನ್ನು ಆಯೋಜಿಸಿದ್ದ, ಆಯೋಜಕರ ಸಹೋದರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದ್ದು, ಇದೀಗ ಆಯೋಜಕರು ಕೂಡಾ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ.
ಮಾರ್ಚ್ 11 ರಂದು ಸೌದಿ ಅರೇಬಿಯಾದಿಂದ ಆಯೋಜಕರ ಸೋದರಿ ಭಾರತಕ್ಕೆ ವಾಪಸಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಉಮ್ರಾ ಯಾತ್ರೆ ಪ್ರಯುಕ್ತ ಆಯೋಜಕರ ಸಹೋದರಿ ಸೌದಿ ಅರೇಬಿಯಾ ದೇಶಕ್ಕೆ ಭೇಟಿ ನೀಡಿದ್ದರು. 35 ವರ್ಷ ಪ್ರಾಯದ ಆಯೋಜಕರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಕೊರೊನಾ ಸೋಂಕಿತ ಸಹೋದರಿಯನ್ನು ಅವರು ಭಾರತಕ್ಕೆ ಮರಳಿದ ಎರಡು ದಿನಗಳ ನಂತರ ಭೇಟಿಯಾಗಿದ್ದೆ. ನಂತರ ಒಂದೆರಡು ಬಾರಿ ಪ್ರತಿಭಟನೆ ನಡೆಯುತ್ತಿದ್ದ ಜಹಾಂಗೀರ್ ಪುರಿಗೆ ಹೋಗಿದ್ದೆ. ಆದರೆ ಆ ಸಮಯದಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬರದ ಹಿನ್ನೆಲೆಯಲ್ಲಿ ಎಂದಿನಂತೆ
ಪ್ರತಿಭಟನೆಗೆ ಹೋಗಿದ್ದೆ ಎಂದು ತಿಳಿಸಿದ್ದಾರೆ.
ನಾನು ಸಹೋದರಿಯನ್ನು ಭೇಟಿಯಾದ ಎರಡು ದಿನಗಳ ನಂತರ ಆಕೆ ಕೊರೊನಾ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಆಕೆಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಆಕೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಆಯೋಜಕರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಸಹೋದರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ನಾನು ಕೊರೊನಾ ವೈರಸ್ ಸೋಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದೇನೆ ಎಂಬ ವಿಚಾರವನ್ನು ವೈದ್ಯರಿಗೆ ತಿಳಿಸುವುದು ಜಾಗೃತ ನಾಗರಿಕನಾಗಿ ನನ್ನ ಜವಾಬ್ದಾರಿ ಎಂದು ನಾನು ಭಾವಿಸಿರುವುದಾಗಿ ತಿಳಿಸಿದ ಅವರು ನನಗೆ ಕೊರೊನಾ ವೈರಸ್ನ ಯಾವುದೇ ಲಕ್ಷಣ ಕಂಡು ಬಂದಿಲ್ಲ. ಆದರೆ ಮಾರ್ಚ್ 16 ರಂದು ಕೆಮ್ಮು ಬಂದಿತ್ತು. ಹೀಗಾಗಿ ನಾನು ಕೂಡ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಭಾವಿಸಿದೆ ಎಂದರು.
ಆಯೋಜಕರು ದೆಹಲಿಯ ಲೋಕ ನಾಯಕ್ ಜಯಪ್ರಕಾಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅವರ ಗಂಟಲಿನ ದ್ರವದ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದಾರೆ. ಇಲ್ಲಿಯವರೆಗೆ ದೆಹಲಿಯಲ್ಲಿ 11 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಇಬ್ಬರು ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಭಾರತದಲ್ಲಿ ಕೊರೊನಾ ವೈರಸ್ಗೆ ಈವರೆಗೆ 169 ಮಂದಿ ತುತ್ತಾಗಿದ್ದು, 14 ಮಂದಿ ಗುಣಮುಖರಾಗಿದ್ದಾರೆ.
ಸೌದಿ ಅರೇಬಿಯಾ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚಾದ ಹಿನ್ನೆಲೆಯಲ್ಲಿ ನಂತರದ ದಿನಗಳಲ್ಲಿ ಯಾತ್ರಾ ಸ್ಥಳಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿತ್ತು.








