====ಔಷಧಿಗೆ ಹೆಚ್ಚು ದರ ವಿಧಿಸಿದರೆ ಕ್ರಮ===
ಬೆಂಗಳೂರು: ಕೋವಿಡ್ ಸಂಭಾವ್ಯ 2ನೇ ಅಲೆಗೆ ಸಿದ್ಧತೆಯಾಗಿ 10 ಜಿಲ್ಲಾಸ್ಪತ್ರೆ, 30 ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಉಪಕರಣಗಳನ್ನು ಖರೀದಿಸಲು 37.72 ಕೋಟಿ ರೂ.ಗೆ ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಟಾಸ್ಕ್ ಫೋರ್ಸ್ ಹೊಸ ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ನಿಯೋಜಿಸಿದ್ದು, ಮುಂದಿನ ಮೂರು ತಿಂಗಳಲ್ಲಿ ಕೋವಿಡ್ ನಿಯಂತ್ರಿಸುವ ಬಗ್ಗೆ ಚರ್ಚೆಯಾಗಿದೆ. 90 ದಿನಗಳಲ್ಲಿ ಕೋವಿಡ್ ಪರೀಕ್ಷೆ ಮಾಡಲು 11.32 ಕೋಟಿ ರೂ. ವೆಚ್ಚದಲ್ಲಿ 10ಲಕ್ಷ ಹೊಸ ರಾಪಿಡ್ ಆಂಟಿಜೆನ್ ಕಿಟ್ ಖರೀದಿ, 22.50 ಕೋಟಿ ರೂ. ವೆಚ್ಚದಲ್ಲಿ ಔಷಧಿ ಖರೀದಿಗೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.

ರೆಮಿಡಿಸ್ವಿರ್ ಔಷಧಿ 1,800 ರೂ.ಗೆ ಸರ್ಕಾರಕ್ಕೆ ದೊರೆಯುತ್ತಿದೆ. ಕೆಲ ಖಾಸಗಿ ಆಸ್ಪತ್ರೆಗಳು ಈ ಔಷಧಿಗೆ ಹೆಚ್ಚು ದರ ವಿಧಿಸುತ್ತಿರುವ ಬಗ್ಗೆ ದೂರು ಬಂದಿದೆ. 2 ಸಾವಿರ ರೂ.ಗಿಂತ ಹೆಚ್ಚಿನ ದರ ವಿಧಿಸಿದರೆ ಕೆಪಿಎಂಇ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
10 ಜಿಲ್ಲೆಗಳ ಅಧಿಕಾರಿಗಳ ಜತೆ ಸಭೆ
ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಸೇರಿದಂತೆ 10 ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವ ಡಾ.ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು.
ಈ ಕುರಿತು ಮಾಹಿತಿ ನೀಡಿದ ಸಚಿವರು, ಕೋವಿಡ್ 2ನೇ ಅಲೆಯನ್ನು ಪರಿಗಣಿಸಿ, 10 ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಗೆ ಗುರಿ ನಿಗಧಿಪಡಿಸಲಾಗಿದೆ. ಈ ತಿಂಗಳು ಹಾಗೂ ಮುಂದಿನ ತಿಂಗಳಲ್ಲಿ ಸಭೆ, ಸಮಾರಂಭ, ಹೊಸ ವರ್ಷಾಚರಣೆಗೆ ಕಡಿವಾಣ ಹಾಕಲು ಸೂಚಿಸಲಾಗಿದೆ. ಡಿಸೆಂಬರ್ 20 ರಿಂದ ಜನವರಿ ಎರಡನೇ ವಾರದವರೆಗೂ ಧಾರ್ಮಿಕ, ಸಾಮಾಜಿಕ ಸಮಾರಂಭಗಳಲ್ಲಿ ಅತಿ ಕಡಿಮೆ ಜನರು ಸೇರುವಂತೆ ನೋಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಲಸಿಕೆ ವಿತರಣೆಗೆ ಸಿದ್ಧತೆಯಾಗಿ ಹೊಸ ಆಪ್ ಅಭಿವೃದ್ಧಿಪಡಿಸಲಾಗಿದೆ. ಇದರಲ್ಲಿ ಲಸಿಕೆ ಸಂಗ್ರಹ, ವಿತರಣೆಗೆ ಮಾಡಿಕೊಂಡ ಸಿದ್ಧತೆ ಬಗ್ಗೆ ಮಾಹಿತಿ ಅಪ್ಲೋಡ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.
ಶೋಕವೇ ಹೊರತು ಸಂಭ್ರಮವಲ್ಲ
ಹೊಸ ವರ್ಷದಲ್ಲಿ ಶೋಕಾಚರಣೆ ಮಾಡಬೇಕಿದೆಯೇ ಹೊರತು ಸಂಭ್ರಮಾಚರಣೆ ಅಲ್ಲ. ಅನೇಕರು ಜೀವ ಕಳೆದುಕೊಂಡಿದ್ದಾರೆ. ಮತ್ತೆ ಕೆಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಭಾರತೀಯರಿಗೆ ಯುಗಾದಿ ಹೊಸವರ್ಷ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








