ಬೀದರ್: ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ 12ನೇ ಶತಮಾನತದಲ್ಲಿ ಕ್ರಾಂತಿಕಾರಿ ಬಸವಣ್ಣ ಹಾಗೂ ಅಲ್ಲಮ ಪ್ರಭು ಕಟ್ಟಿದ್ದ ಹಳೆಯ ಅನುಭವ ಮಂಟಪದ ಹತ್ತಿರದ ಆವರಣದಲ್ಲಿ ನೂತನ ಅನುಭವ ಮಂಟಪ ತಲೆಎತ್ತಲಿದೆ. ಅನುಭವ ಮಂಟಪಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಇದು ಪೂರ್ವಜನ್ಮದ ಪುಣ್ಯ ಕಾರ್ಯ ಎಂದು ತಿಳಿಸಿದರು.

ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100 ಕೋಟಿ ರೂ ಬಿಡುಗಡೆ ಮಾಡಿದ್ದು, ಇನ್ನು 100 ಕೋಟಿ ರೂಗಳನ್ನು ವಾರದೊಳಗೆ ಬಿಡುಗಡೆ ಮಾಡಿ, ಟೆಂಡರ್ ಪ್ರಕ್ರಿಯೆ ಪೂರ್ಣವಾದ ಕೂಡಲೇ ಕಟ್ಟಡ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ ಇತಿಹಾಸದಲ್ಲಿ ಇಂದು ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ದಿನವಾಗಿದೆ ಎಂದ ಅವರು, ಸಾಧನೆ ಮಾತನಾಡಬೇಕು. ಮಾತಾಡುವುದು ಸಾಧನೆಯಾಗಬಾರದು ಎನ್ನುವುದು ತಮ್ಮ ಮನೋಭಾವವಾಗಿದೆ. ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಅಂತೆಯೇ ಎರಡು ವರ್ಷದೊಳಗೆ ಅನುಭವ ಮಂಟಪ ನಿರ್ಮಿಸಿ, ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಅವರು ಇವರು ಎನ್ನದೇ ಎಲ್ಲ ಸಮುದಾಯದ ಜನರು ಸೇರಿ ಚರ್ಚಿಸಿ ಚಿಂತನ ಮಂಥನ ನಡೆಸುತ್ತಿದ್ದ ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿಯಾಗಿದೆ ಎಂದರು. ಸಾಮಾಜಿಕ ಬದಲಾವಣೆ ತರುವಲ್ಲಿ ಅನುಭವ ಮಂಟಪದ ಪಾತ್ರವು ಅತೀ ಮಹತ್ವದ್ದಾಗಿದೆ. ಮನುಕುಲದ ಏಳ್ಗೆಗೆ ಇಡೀ ವಚನ ಸಾಹಿತ್ಯ ಮಾರ್ಗದರ್ಶಿಯಾಗಿದೆ ಎಂದರು. ಅಣ್ಣ ಬಸವಣ್ಣನವರು ಈ ಕಲ್ಯಾಣ ನಾಡಿನಿಂದ ಹೊರಹೊಮ್ಮಿದ ಈ ದೇಶ ಕಂಡ ಬಹುದೊಡ್ಡ ವಿಶ್ವಗುರು ಅನ್ನುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಗೋ.ರು.ಚ ಅವರಂತಹ ಇನ್ನೂ ಅನೇಕ ಹಿರಿಯ ಸಾಹಿತಿಗಳ ಸಲಹೆ ಪಡೆದು, ಈ ಭಾಗದ ಜನರ ಬೇಡಿಕೆಯಂತೆ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ, ಪ್ರತಿ ವರ್ಷ ಬಸವ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು. ಇಂತಹ ಒಳ್ಳೆಯ ಕಾರ್ಯಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.


ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಅನುಭವ ಮಂಟಪದ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ನನ್ನ ಬದುಕು ಪಾವನವಾಯ್ತು ಎಂದು ಹೇಳಲು ಹೆಮ್ಮೆ ಅನಿಸುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪಶು ಸಂಗೋಪನೆ, ಪ್ರಭು ಚವ್ಹಾಣ್ ಮಾತನಾಡಿ, ಈ ಶರಣ ಕಾಯಕ ಭೂಮಿಯಲ್ಲಿ 12ನೇ ಶತಮಾನದ ವೈಭವವನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಅನುಭವ ಮಂಟಪ ನಿರ್ಮಾಣಕ್ಕೆ ಯಡಿಯೂರಪ್ಪ ಚಾಲನೆ ನೀಡಿದ್ದು, ಬೀದರ್ ಮತ್ತು ರಾಜ್ಯದ ಐತಿಹಾಸಿದ ಪುಟಗಳಲ್ಲಿ ದಾಖಲಾಗುವಂತದ್ದಾಗಿದೆ ಎಂದರು.
ಶಾಸಕರಾದ ಈಶ್ವರ ಖಂಡ್ರೆ ಮಾತನಾಡಿ, ಇಂದು ಬಸವ ಅನುಯಾಯಿಗಳಿಗೆ ಸಂತಷದ ದಿನ. ಈ ಕಟ್ಟಡ ಬೇಗ ನಿರ್ಮಾಣವಾಗಬೇಕು. ಈ ಮೂಲಕ ಬಸವಕಲ್ಯಾಣದ ಕೀರ್ತಿ ವಿಶ್ವದೆಲ್ಲೆಡೆ ಹರಡಲಿ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








