ಟೆಸ್ಟ್, ಸಾವು, ಚಿಕಿತ್ಸೆ ಎಲ್ಲದರಲ್ಲೂ ಸರ್ಕಾರ ಸುಳ್ಳು ಹೇಳುತ್ತಿದೆ : ಸಿದ್ದರಾಮಯ್ಯ
ಬೆಂಗಳೂರು : ರಾಜ್ಯ ಸರ್ಕಾರ ಕೊರೊನಾ ಟೆಸ್ಟ್, ಸಾವು, ಚಿಕಿತ್ಸೆ ಎಲ್ಲದರಲ್ಲೂ ಸುಳ್ಳು ಹೇಳುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅಲ್ಲದೆ ಪರೀಕ್ಷೆ ಪ್ರಮಾಣವನ್ನು ಕೂಡಲೇ ಹೆಚ್ಚಿಸಿ ಕೋವಿಡ್ ನಿಂದಾದ ಮರಣಗಳನ್ನು ನಿಖರವಾಗಿ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಸುದೀರ್ಘ ಪತ್ರ ಬರೆದಿರುವ ಸಿದ್ದರಾಮಯ್ಯ, ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂದು ಮಾತನಾಡುತ್ತಿದ್ದಾರೆ. ತಜ್ಞರ ಪ್ರಕಾರ ವೈರಸ್ ನ ಅಲೆ ಕಡಿಮೆಯಾಗುವುದೆಂದರೆ ಟೆಸ್ಟ್ ನಡೆಸಿದಾಗ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕಡಿಮೆಯಾಗಬೇಕು.
ವಾಸ್ತವದಲ್ಲಿ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುವುದರ ಬದಲು ಹೆಚ್ಚಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಳ್ಳಾರಿ, ಹಾಸನ, ಮೈಸೂರು, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮುಂತಾದ ಜಿಲ್ಲೆಗಳ ಪಾಸಿಟಿವಿಟಿ ದರ ಶೇ. 50ಕ್ಕಿಂತ ಹೆಚ್ಚಿಗೆ ಇದೆ.
ಇನ್ನುಳಿದ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರ ಶೇ. 35ರ ಆಸುಪಾಸಿನಲ್ಲೇ ಇದೆ. ಶೇ. 20ಕ್ಕಿಂತ ಕಡಿಮೆ ಇರುವ ಜಿಲ್ಲೆಗಳು ಒಂದೆರಡಷ್ಟೇ. ಹೀಗಿರುವಾಗ ಸೋಂಕು ಕಡಿಮೆಯಾಗುತ್ತಿದೆ ಎಂದರೆ ಸುಳ್ಳು ಹೇಳಲಾಗುತ್ತಿದೆ ಎಂದರ್ಥ.
ಟೆಸ್ಟ್, ಸಾವು, ಚಿಕಿತ್ಸೆ ಎಲ್ಲದರಲ್ಲೂ ಸುಳ್ಳು ಹೇಳಲಾಗ್ತಿದೆ. ಟೆಸ್ಟ್ ವಿಚಾರವನ್ನೇ ನೋಡಿದರೂ ಕೂಡ ಏಪ್ರಿಲ್ ತಿಂಗಳ ಕಡೆಯ ವಾರದಲ್ಲಿ ಪ್ರತಿದಿನ ಸರಾಸರಿ 1.75 ಲಕ್ಷ ಟೆಸ್ಟ್ ಮಾಡಲಾಗುತ್ತಿತ್ತು. ಈಗ ಶೇ. 30ರಷ್ಟು ಕಡಿಮೆಯಾಗಿ ದಿನಕ್ಕೆ ಸರಾಸರಿ 1.15 ಲಕ್ಷದಿಂದ 1.24 ಲಕ್ಷಕ್ಕೆ ಇಳಿಕೆಯಾಗಿದೆ.
ಮೇ 6, 2021ರಂದು 2,64,441 ಜನರಿಗೆ ಟೆಸ್ಟ್ ಮಾಡಲಾಗಿದ್ದರೆ, ಮೇ 11, 2021ರಂದು ಕೇವಲ 1,16, 238 ಜನರಿಗೆ ಟೆಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಲಸಿಕೆ ಹಾಕಿಸಿಕೊಳ್ಳಲು ಸಮರ್ಪಕ ವ್ಯವಸ್ಥೆ ಮಾಡದೆ, ಅಲ್ಲೂ ಕಿ.ಮೀ.ಗಟ್ಟಲೆ ಕ್ಯೂ ನಿಲ್ಲಿಸುವುದು, ಪಡಿತರ ಪಡೆಯಲು ಅಂಗಡಿಗಳ ಮುಂದೆ ಕ್ಯೂ ನಿಲ್ಲಿಸುವುದೂ ನಡೆಯುತ್ತಿದೆ.
ಈ ರೀತಿಯ ಅವ್ಯವಸ್ಥೆಗಳಿಂದ ಕೊರೊನಾ ನಿಯಂತ್ರಿಸಲು ಸಾಧ್ಯವೇ? ಸರ್ಕಾರ ಈ ಎಲ್ಲ ತಪ್ಪುಗಳನ್ನು ಮುಚ್ಚಿಕೊಳ್ಳಲು ಟೆಸ್ಟ್ ಕಡಿಮೆ ಮಾಡಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದು ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನು ಪತ್ರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯ, ‘ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ’ ಎಂದು ಬುರುಡೆ ಬಿಟ್ಟು ಜನರನ್ನು ಯಾಮಾರಿಸಿದ ಮೋದಿಯವರ ಸರ್ಕಾರ ಮತ್ತು ಅವರ ಪಟಾಲಮ್ಮಿಗೆ ಬಹುಶಃ ಈಗಲಾದರೂ ಅರ್ಥವಾಗಬೇಕು.
ಸರ್ಕಾರದ ಅಧೀನದಲ್ಲಿರುವ ಕಂಪನಿ, ಕಾರ್ಖಾನೆಗಳು ಮಾತ್ರ ಇಂತಹ ತುರ್ತು ಪರಿಸ್ಥಿತಿಯಲ್ಲಿ ದೇಶದ ರಕ್ಷಣೆಗೆ ನಿಲ್ಲುತ್ತವೆ ಎಂದು ಸಾರಾಸಗಟಾಗಿ ಸರ್ಕಾರದ ಅಧೀನದಲ್ಲಿದ್ದ ಕಾರ್ಖಾನೆ, ಕಂಪನಿ, ಸಂಸ್ಥೆಗಳನ್ನುಕಾರ್ಪೋರೇಟ್ ಧಣಿಗಳಿಗೆ ಮಾರಾಟ ಮಾಡಿ ಅದರ ಮೂಲಕ ಜನರ ಸಂಪತ್ತನ್ನೆಲ್ಲ ದೋಚುವ ಭೀಕರ ಭ್ಟಷ್ಟಾಚಾರಕ್ಕೆ ಅವಕಾಶ ಕೊಡುವ ಕೇಂದ್ರ ಸರ್ಕಾರಕ್ಕೆ ಕೇವಲ ಒಬ್ಬನೇ ಒಬ್ಬ ವ್ಯಾಕ್ಸಿನ್ ತಯಾರಕನನ್ನು ನಿಯಂತ್ರಿಸಲಾಗದ ದುಸ್ಥಿತಿ ಬಂದೊದಗಿದೆ.
ಸಾರ್ವಜನಿಕ ಕಂಪನಿಗಳನ್ನು ಯಾವ ಕಾರಣಕ್ಕೂ ಖಾಸಗಿಯವರಿಗೆ ನೀಡಬಾರದೆಂದು ಒತ್ತಾಯಿಸುವ ಠರಾವನ್ನು ಮಾಡಿ ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.










