ಪೊಲೀಸರ ಮಕ್ಕಳಿಗೆ ಸ್ಕಾಲರ್ಶಿಪ್ : ಬಸವರಾಜ ಬೊಮ್ಮಾಯಿ
ಮೈಸೂರು : ಪೊಲೀಸರ ಮಕ್ಕಳಿಗೆ ಸ್ಕಾಲರ್ಶಿಪ್ ನೀಡುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಹಿಂದಿನಿಂದಲೂ ಸ್ಕಾಲರ್ಶಿಪ್ ವ್ಯವಸ್ಥೆ ಇದೆ. ಈಗ ಇನ್ನಷ್ಟು ಹೆಚ್ಚಿನ ಅನುದಾನ ನೀಡಲು ತೀರ್ಮಾನ ಮಾಡಿದ್ದೇವೆ.
ಎಸ್ಎಸ್ಎಲ್ಸಿ ಮತ್ತು ಅದಕ್ಕಿಂತ ಉನ್ನತ ವ್ಯಾಸಂಗಕ್ಕೆ ವಿದ್ಯಾರ್ಥಿ ವೇತನ ಸಿಗಲಿದೆ. ಈ ಯೋಜನೆ ನಿನ್ನೆಯಿಂದ ಆರಂಭ ಆಗಿದೆ.
ಪೊಲೀಸರಿಗೆ ವಸತಿ ಗೃಹಗಳ ಸೌಕರ್ಯ ಒದಗಿಸಬೇಕಿದೆ. ಈಗಾಗಲೇ ಶಿಥಿಲಾವಸ್ಥೆಯಲ್ಲಿರುವ ವಸತಿ ಗೃಹಗಳನ್ನು ಗುರುತಿಸಲಾಗಿದೆ.
ರಾಜ್ಯಾದ್ಯಂತ ಸುಮಾರು 100 ಹೊಸ ಕಟ್ಟಡಗಳ ನಿರ್ಮಾಣಕ್ಕೂ ಚಿಂತನೆ ನಡೆಸಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇನ್ನು ರಾಜ್ಯದಲ್ಲಿ ಲಾಕ್ಡೌನ್ ಮುಗಿದ ಬಳಿಕ ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಲಾಕ್ಡೌನ್ ಸಂದರ್ಭದಲ್ಲಿ ಕ್ರೈಂ ರೇಟ್ ಕಡಿಮೆ ಆಗಿತ್ತು.
ಆದರೆ ಲಾಕ್ಡೌನ್ ಬಳಿಕ ದರೋಡೆ, ಕಳ್ಳತನ, ಸರಗಳ್ಳತನ ಪ್ರಕರಣಗಳು ಹೆಚ್ಚಾಗಿವೆ.
ಮೈಸೂರು ನಗರಕ್ಕೆ ಸೀಮಿತವಾಗಿದ್ದ ಸರಗಳ್ಳತನ ಈಗ ಗ್ರಾಮಾಂತರ ಪ್ರದೇಶದಲ್ಲೂ ನಡೆದಿವೆ. ಸೈಬರ್ ಕ್ರೈಂ, ಆರ್ಥಿಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಿದ್ದಾರೆ.