ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ : ಕೋಡಿಮಠದ ಶ್ರೀ ಭವಿಷ್ಯ
ಶಿರಸಿ : ನವೆಂಬರ್ ನಿಂದ ಸಂಕ್ರಾಂತಿ ನಡುವೆ ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದ್ದು, ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ತಾಲ್ಲೂಕಿನ ನೇರಲಕಟ್ಟೆ (ಈಚಲಬೆಟ್ಟ) ಗ್ರಾಮದಲ್ಲಿ ಮಾತನಾಡಿದ ಅವರು, ಆಗಸ್ಟ್ ಮೂರನೇ ವಾರದಿಂದ ಕೋವಿಡ್ ಹಾವಳಿ ಹೆಚ್ಚಲಿದೆ. ರೋಗದಿಂದ ಜನರು ಸಾಯುವುದಿಲ್ಲ. ರೋಗದ ಭಯದಿಂದಲ್ಲೇ ಸಾಯುವವರ ಸಂಖ್ಯೆ ಹೆಚ್ಚಲಿದೆ. ಜನ ಧೈರ್ಯ ಕಳೆದುಕೊಳ್ಳಬಾರದು ಎಂದು ಎಚ್ಚರಿಸಿದರು.
ಇದೇ ವೇಳೆ ರಾಜ್ಯದಲ್ಲಿನ ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿ, ಬೇಟೆಗಾರನೊಬ್ಬನಿಂದ ತಪ್ಪಿಸಿಕೊಂಡ ಜಿಂಕೆ ಸನ್ಯಾಸಿಯೊಬ್ಬನ ಎದುರು ಹಾದು ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ಸನ್ಯಾಸಿ ದ್ವಂದ್ವದಲ್ಲಿ ಸಿಲುಕಿದ್ದರು. ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣವಾದಂತಾಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಸನ್ಯಾಸಿಗಿತ್ತು. ಇದೇ ವಿಚಾರ ರಾಜಕೀಯದ ಬಗ್ಗೆ ಹೇಳಲು ತೊಡಕಾಗುತ್ತದೆ. ಆದರೆ ಶೀಘ್ರದಲ್ಲಿಯೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದು ನುಡಿದರು.