ಕೇರಳದಲ್ಲಿ ಕೊರೊನಾ ಹಾವಳಿ – ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ..!
ಕೇರಳದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ.. ಕೇರಳ: ಕೊರೊನಾ ವಿರುದ್ಧದ ಹೋರಾಟಕ್ಕೆ ನಿರೀಕ್ಷೆಗೂ ಮೀರಿ ಸಾಕಷ್ಟು ಕ್ರಮಗಳನ್ನ ಕೈಗೊಂಡು ಕೋವಿಡ್ ನಿಯಂತ್ರಣಕ್ಕೆ ಮಾದರಿ ರಾಜ್ಯ ಎನಿಸಿಕೊಂಡಿದ್ದ ಕೇರಳ ಇಂದು ಕೊರೊನಾದ ನಂಬರ್ 1 ಹಾಟ್ ಸ್ಪಾಟ್ ಆಗಿ ಮಾರ್ಪಾಡಾಗಿದೆ. ಕೇರಳದಲ್ಲಿ ಈಗ ದೇಶದ ಅರ್ಧದಷ್ಟು ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ. ಕಳೆದೆರೆಡು ದಿನಗಳಿಂದ ಕೇರಳದಲ್ಲಿ 40 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ. ದೇಶದಲ್ಲಿ ಹೊಸದಾಗಿ ದೃಢಪಡುತ್ತಿರುವ ಸೋಂಕು ಪ್ರಮಾಣದ ಶೇ.50ರಷ್ಟು ಕೇರಳದಲ್ಲಿಯೇ ಇದೆ.
ಇದೀಗ ರಾಹುಲ್ ಗಾಂಧಿ ಇದೇ ವಿಚಾರವಾಗಿ ಕೇಂದ್ರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.. ಟ್ವೀಟ್ ಮಾಡಿರುವ ಅವರು, ಎಲ್ಲಾ ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸುವಂತೆ ನಾನು ರಾಜ್ಯದ ನಮ್ಮ ಸಹೋದರರು ಮತ್ತು ಸಹೋದರಿಯರಿಗೆ ಮನವಿ ಮಾಡುತ್ತೇನೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ದೇಶದ ಬೇರೆ ರಾಜ್ಯಗಳಲ್ಲಿ ಕೊರೊನಾ ಆರ್ಭಟ ಇಳಿಯುತ್ತಿದ್ದರೆ ಕೇರಳದಲ್ಲಿ ಮಾತ್ರ ಏರಿಕೆಯಾಗುತ್ತಿದೆ. ದೇಶದ ಸಕ್ರಿಯ ಪ್ರಕರಣಗಳ ಪೈಕಿ ಶೇ. 37.1 ರಷ್ಟು ಕೇರಳದಲ್ಲಿವೆ. ರಾಜ್ಯದಲ್ಲಿ ದಿನನಿತ್ಯದ ಸರಾಸರಿ ಪ್ರಕರಣಗಳು 17,443 ಕ್ಕಿಂತ ಹೆಚ್ಚಿವೆ. ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯ ಶೇಕಡಾ 12.93 ರಷ್ಟು ಮತ್ತು ವಾರಕ್ಕೆ 11.97 ರಷ್ಟು ಪ್ರಕರಣಗಳು ಕೇರಳದಿಂದಲೇ ವರದಿಯಾಗುತ್ತಿವೆ.
ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ನಿರ್ದೇಶಕ ಎಸ್. ಕೆ. ಸಿಂಗ್ ನೇತೃತ್ವದ 6 ಸದಸ್ಯರ ತಂಡವು ಇಂದು ಕೇರಳ ತಲುಪಲಿದ್ದು, ಕೋವಿಡ್ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಲಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕೋವಿಡ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕೇರಳ ಸರ್ಕಾರಕ್ಕೆ ಕೇಂದ್ರ ತಂಡ ನೆರವು ನೀಡಲಿದೆ.