ಬೆಂಗಳೂರು : ದೇಶದಲ್ಲಿ ಲಾಕ್ ಡೌನ್ 2.0 ಜಾರಿಯಲ್ಲಿದೆ. ಆದರೂ ನಿರೀಕ್ಷಿತ ಮಟ್ಟದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಸಿಗುತ್ತಿಲ್ಲ. ಈ ಮಧ್ಯೆ ಮೇ 3ಕ್ಕೆ ಎರಡನೇ ಹಂತದ ಲಾಕ್ ಡೌನ್ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಲಾಕ್ ಡೌನ್ ಕೊನೆಯಾಗಲಿದೆಯಾ? ಅಥವಾ ಮುಂದುವರೆಯಲಿದೆಯಾ ಎಂಬುದಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.
ಬೆಂಗಳೂರಿನ ಆರ್.ಟಿ.ನಗರದಲ್ಲಿ ಮಾತನಾಡಿದ ಅವರು, ಕೋವಿಡ್ 19 ರಾಜ್ಯದಲ್ಲಿ ನಿಯಂತ್ರಣದಲ್ಲಿದೆ. ಪ್ರಧಾನಿಗಳ ವಿಡಿಯೋ ಕಾನ್ಫರೆನ್ಸ್ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ಪ್ರಧಾನಿಗಳ ಸಲಹೆ ಸೂಚನೆ ಆಧರಿಸಿ ಲಾಕ್ಡೌನ್ ಕುರಿತು ನಿರ್ಧಾರ ಮಾಡುತ್ತೇವೆ ಎಂದರು.
ಇನ್ನು ಲಾಕ್ಡೌನ್ ಮುಂದುವರಿಯುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ಇಲ್ಲ. ರಾಜ್ಯದಲ್ಲಿನ ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಕೊರೊನಾ ಪರಿಸ್ಥಿತಿಯಿಂದ ಸಂತ್ರಸ್ತರಾದ ಜನರಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ತಿಳಿಸಿದರು.
ರಾಜ್ಯವನ್ನು ಕೋವಿಡ್ ಮುಕ್ತ ಮಾಡಲು ಸರ್ಕಾರ ಪಣ ತೊಟ್ಟಿದೆ. ರಾಜ್ಯಾದ್ಯಂತ ವೈರಸ್ ನಿಯಂತ್ರಣಕ್ಕೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಸಹಕಾರದಿಂದ ವೈರಸ್ ಮುಕ್ತಗೊಳಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.








