74ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ : ಕೈ ನಾಯಕರ ಶುಭಾಶಯ
ಬೆಂಗಳೂರು : ರಾಜ್ಯ ಕಾಂಗ್ರೆಸ್ ನ ಮಾಸ್ ಲೀಡರ್, ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 74ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್ ಪಾಟೀಲ್, ಮಾಜಿ ಸಚಿವ ಜಮೀರ್ ಅಹಮದ್ ಖಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟ್ವೀಟ್ನಲ್ಲಿ, ನಮ್ಮ ಶಾಸಕಾಂಗ ಪಕ್ಷದ ನಾಯಕರು ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನವು ಸುಖ-ಶಾಂತಿ-ನೆಮ್ಮದಿಯಿಂದ ತುಂಬಿರಲಿ ಎಂದು ಆಶಿಸುತ್ತೇನೆ ಎಂದು ಬರೆದಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಿದ್ದರಾಮಯ್ಯ ಅವರು ನೀಡಿದ ವಿವಿಧ ಭಾಗ್ಯಗಳ ಕುರಿತು ಪ್ರಸ್ತಾಪಿಸಿದ್ದು, ಬಡವರ ಹಸಿವು ನೀಗಿಸಲು ಅನ್ನಭಾಗ್ಯ, ಮಕ್ಕಳ ಪೌಷ್ಟಿಕತೆಗೆ ಕ್ಷೀರಭಾಗ್ಯ ಕೊಟ್ಟು 5 ವರ್ಷಗಳ ನಿಷ್ಕಳಂಕ, ಅತ್ಯುತ್ತಮ ಆಡಳಿತ ನೀಡಿದ ಮಾಜಿ ಮುಖ್ಯಮಂತ್ರಿ, ನಮ್ಮ ನೆಚ್ಚಿನ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ಆಯಸ್ಸು, ಆರೋಗ್ಯ ಕರುಣಿಸಿ ಈ ನಾಡಿಗೆ ದೀರ್ಘಸೇವೆ ಸಲ್ಲಿಸಲು ಚೈತನ್ಯ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಇನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್, ಸಾಮಾಜಿಕ ನ್ಯಾಯ ಮತ್ತು ಜಾತ್ಯಾತೀತ ಸಿದ್ಧಾಂತಗಳ ಪ್ರಬಲ ಪ್ರತಿಪಾದಕರು, ಬಡವರು ಹಾಗೂ ಶೋಷಿತರ ಏಳಿಗೆಗೆ ಸದಾಕಾಲ ಶ್ರಮಿಸುವ ನಮ್ಮ ಹೆಮ್ಮೆಯ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.









